ಕೋಲಾರ: ‘ಸಿದ್ದರಾಮಯ್ಯ ಅವರು ಅಹಿಂದ ಮಾಡಲಿ ಅಥವಾ ಬೇರೆ ಏನಾದರೂ ಮಾಡಿಕೊಳ್ಳಲಿ. ಅವರಿಗೂ ನಮಗೂ ಸಂಬಂಧವಿಲ್ಲ. ಅಹಿಂದ ಹೋರಾಟದಿಂದ ಬಿಜೆಪಿಗೆ ರಾಜಕೀಯವಾಗಿ ಹಿನ್ನಡೆ ಆಗುವುದಿಲ್ಲ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದರು.
ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಪಕ್ಷವೇ ಬೇರೆ, ಸಿದ್ದರಾಮಯ್ಯ ಅವರ ಪಕ್ಷವೇ ಬೇರೆ. ಅಹಿಂದ ಹೋರಾಟ ಅವರ ಪಕ್ಷಕ್ಕೆ ಸೀಮಿತವಾದ ವಿಚಾರ. ನಮ್ಮ ಪಕ್ಷದಡಿ ರೂಪಿಸಬೇಕಾದ ಕಾರ್ಯಕ್ರಮಗಳು ಮತ್ತು ಜನರಿಗೆ ಏನು ಮುಟ್ಟಿಸಬೇಕೋ, ತಿಳಿ ಹೇಳಬೇಕೋ ಅದನ್ನು ಮಾಡುತ್ತೇವೆ’ ಎಂದರು.
‘ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಆಗಲು ನಾಯಕರ ನಡುವೆ ಕಿತ್ತಾಟ ನಡೆಯುತ್ತಿದೆ. ರಾಜ್ಯದ ಜನ ಬಿಜೆಪಿ ಪರವಾಗಿದ್ದಾರೆ. ಬಿಜೆಪಿಗೆ ಅಧಿಕಾರ ನೀಡಬೇಕೆಂದು ಜನ ತೀರ್ಮಾನಿಸಿದ್ದಾರೆ. ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ’ ಎಂದು ನುಡಿದರು.
‘ಆಯಾ ಜಾತಿಗಳ ಸೌಲಭ್ಯಕ್ಕೆ ಸಮುದಾಯದವರು ಹೋರಾಟ ಮಾಡುತ್ತಿದ್ದಾರೆ. ಆರ್ಎಸ್ಎಸ್ಗೂ ಕುರುಬ ಸಮಾಜಕ್ಕೂ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಅವರು ಯಾವ ಲೆಕ್ಕಾಚಾರದಲ್ಲಿ ಕುರುಬ ಸಮಾಜ ಮತ್ತು ಆರ್ಎಸ್ಎಸ್ ನಡುವೆ ಸಂಬಂಧ ಕಲ್ಪಿಸುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಮಾತನಾಡಲು ಏನೋ ಒಂದು ವಿಚಾರ ಬೇಕಷ್ಟೇ. ಆದರೆ, ಅವರ ಮಾತಿನಲ್ಲಿ ವಾಸ್ತಾವಂಶ ಇರುವುದಿಲ್ಲ’ ಎಂದು ಟೀಕಿಸಿದರು.
ತೀರ್ಮಾನಕ್ಕೆ ಬದ್ಧ: ‘ಪಕ್ಷದಲ್ಲಿ ಕೆಲವರಿಗೆ ಮಾತನಾಡುವ ಚಟ ಇರುವುದರಿಂದ ಮಾತನಾಡುತ್ತಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನೋಟಿಸ್ ನೀಡಿರುವುದು ಪಕ್ಷದ ಶಿಸ್ತು ಸಮಿತಿಗೆ ಸಂಬಂಧಪಟ್ಟ ವಿಷಯ. ಶಿಸ್ತು ಸಮಿತಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ’ ಎಂದು ತಿಳಿಸಿದರು.
‘ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಶ್ರಮಿಸುತ್ತಿದ್ದಾರೆ. ಮುಂದೆಯೂ ತಮ್ಮದೇ ಸರ್ಕಾರ ಬರಬೇಕೆಂದು ಜನಪರ ಕಾರ್ಯಕ್ರಮ ರೂಪಿಸುತ್ತಿದ್ದಾರೆ. ನಾವು ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತೇವೆಯೇ ಹೊರತು ಯಾರೋ ಸಣ್ಣದಾಗಿ ಮಾತನಾಡುತ್ತಾರೆಂದು ಆ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ’ ಎಂದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.