ADVERTISEMENT

ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಧರ್ಮ ಪಾಲನೆ

ವಿಧಾನಸಭೆ ಉಪಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2019, 13:30 IST
Last Updated 24 ಮಾರ್ಚ್ 2019, 13:30 IST

ಕೋಲಾರ: ‘ರಾಜ್ಯದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದು, ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಧರ್ಮ ಪಾಲನೆ ಮುಂದುವರೆಯುತ್ತದೆ’ ಎಂದು ವಿಧಾಸಭೆ ಉಪಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ತಿಳಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜೆಡಿಎಸ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ವೈಮನಸ್ಯಗಳನ್ನು ಮರೆತು ಅಭ್ಯರ್ಥಿಗಳ ಗೆಲುವಿಗೆ ಮುಂದಾಗುತ್ತಾರೆ’ ಎಂದರು.

‘ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿವೆ. ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕು ಎನ್ನುವುದೇ ಇದರ ಉದ್ದೇಶವಾಗಿತ್ತು’ ಎಂದು ಹೇಳಿದರು.

ADVERTISEMENT

‘ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳ ಪೈಕಿ ಜೆಡಿಎಸ್‌ಗೆ 8 ಹಾಗೂ ಕಾಂಗ್ರೆಸ್‌ಗೆ 20 ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದು, ರಾಜ್ಯದಲ್ಲಿರುವಂತೆಯೇ ಮೈತ್ರಿ ಧರ್ಮ ಎಲ್ಲ ಕಡೆ ಪಾಲನೆಯಾಗುತ್ತದೆ. ಅದಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಮುಂದಾಗಬೇಕು’ ಎಂದು ಸಲಹೆ ನೀಡಿದರು.

‘ಚುನಾವಣೆ ಸಂದರ್ಭಗಳಲ್ಲಿ ವೈಮನಸ್ಯಗಳು ಇದ್ದೇ ಇರುತ್ತವೆ. ನಾಮಪತ್ರ ಪ್ರಕ್ರಿಯೆ ಮುಗಿದ ಕೂಡಲೇ ಅವೆಲ್ಲವೂ ಸರಿಹೋಗುತ್ತವೆ. ಕಳೆದ ಮಾ.13ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್‌ನ ಎಲ್ಲ ಮುಖಂಡರ ಸಭೆ ನಡೆಸಿ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಿಸುವಂತೆ ಸೂಚನೆ ನೀಡಿದ್ದು, ಧರ್ಮ ಪಾಲಿಸುತ್ತೇವೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದು, ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೆವೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಪ್ರಕಟಿಸಿದರು.

‘ನಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತು ಪ್ರತಿಯೊಬ್ಬರೂ ಕೆ.ಎಚ್.ಮುನಿಯಪ್ಪ ಅವರಿಗೆ ಮತನೀಡಿ ಗೆಲ್ಲಿಸಬೇಕು. ಮಾ.25ರ ಸೋಮವಾರದಂದು ನಾಮಪತ್ರ ಸಲ್ಲಿಕೆ ವೇಳೆ ನಾವು ಸೇರಿದಂತೆ ಪಕ್ಷದ ಮುಖಂಡರು ಕಾಂಗ್ರೆಸ್‌ನೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು’ ಎಂದು ಕೋರಿದರು.

‘ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಬಜೆಟ್‌ನಲ್ಲೂ ಜಿಲ್ಲೆ ಆದ್ಯತೆ ನೀಡಿದ್ದಾರೆ. ರಾಜ್ಯದ 28 ಸ್ಥಾನಗಳ ಪೈಕಿ 23ರಲ್ಲಿ ಗೆಲುವು ಸಾಧಿಸುವುದು ಖಚಿತ’ ಎಂದು ವಿಶ್ವಾಸವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಆರ್.ನಾರಾಯಣಸ್ವಾಮಿ, ಕೆ.ಎಸ್.ನಂಜುಂಡಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥ್, ನಗರಸಭೆ ಸದಸ್ಯ ಬಿ.ಎಂ.ಮುಬಾರಕ್, ಮುಖಂಡ ಎಂ.ಮಲ್ಲೇಶ್ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.