ADVERTISEMENT

ಅಂಬೇಡ್ಕರ್‌ ಭವನ: ವಿಳಂಬ ಬೇಡ

ಅಧಿಕಾರಿಗಳಿಗೆ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ಪ್ರಸಾದ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 14:30 IST
Last Updated 4 ಆಗಸ್ಟ್ 2020, 14:30 IST
ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್.ಅರುಣ್‌ಪ್ರಸಾದ್ ಕೋಲಾರದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್.ಅರುಣ್‌ಪ್ರಸಾದ್ ಕೋಲಾರದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   

ಕೋಲಾರ: ‘ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ ಏಕಕಾಲಕ್ಕೆ ಅಂಬೇಡ್ಕರ್‌ ಭವನಗಳ ಕಾಮಗಾರಿ ಪೂರ್ಣಗೊಳ್ಳಬೇಕು. ಕಾಮಗಾರಿ ಯಾವುದೇ ಕಾರಣಕ್ಕೂ ವಿಳಂಬ ಆಗಬಾರದು’ ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್.ಅರುಣ್‌ಪ್ರಸಾದ್ ಸೂಚಿಸಿದರು.

ಇಲ್ಲಿ ಮಂಗಳವಾರ ನಡೆದ ಸ್ಥಾಯಿ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ‘ಅಂಬೇಡ್ಕರ್‌ ಭವನಗಳ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಎದುರು ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ನಿರ್ಮಿತಿ ಕೇಂದ್ರ ಹಾಗೂ ಭೂಸೇನಾ ನಿಗಮದ ಅಧಿಕಾರಿಗಳು ಸಭೆಗೆ ಗೈರಾದರು. ಈ ವಿಷಯ ತಿಳಿದು ಕೆಂಡಾಮಂಡಲರಾದ ಅಧ್ಯಕ್ಷರು, ‘ಅಧಿಕಾರಿಗಳಿಗೆ ಸ್ವಲ್ಪವೂ ಜವಾಬ್ದಾರಿಯಿಲ್ಲ. ಸಭೆಗೆ ಬಾರದೆ ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿ’ ಎಂದು ಆದೇಶಿಸಿದರು.

ADVERTISEMENT

ವರದಿ ನೀಡಬೇಕು: ‘ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂದಿನ ಸ್ಥಾಯಿ ಸಮಿತಿಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಅನುದಾನ ಬಳಕೆ ಮತ್ತು ಉಳಿಕೆ ಸಂಬಂಧ ಸಭೆಗೆ ಸಂಪೂರ್ಣ ಮಾಹಿತಿ ನೀಡಬೇಕು. ಅಲ್ಲದೇ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಕುರಿತು ವರದಿ ನೀಡಬೇಕು’ ಎಂದು ತಿಳಿಸಿದರು.

‘ವಕ್ಕಲೇರಿ ಹೋಬಳಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವ ಸಂಬಂಧ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದಿದ್ದೇವೆ. ಆದರೆ, ಘಟಕ ಮಾತ್ರ ಆರಂಭಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಅಧಿಕಾರಿಗಳು ಇನ್ನಾದರೂ ಗ್ರಾಮೀಣ ಭಾಗದಲ್ಲಿ ನೀರಿನ ಘಟಕ ಆರಂಭಿಸಬೇಕು. ಇಲ್ಲದಿದ್ದರೆ ಜಿ.ಪಂ ಸದಸ್ಯರ ಸ್ವಂತ ಹಣದಲ್ಲಿ ಘಟಕಗಳ ಸ್ಥಾಪನೆ ಮಾಡಿಕೊಳ್ಳುತ್ತೇವೆ. ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ಸುಸ್ಥಿತಿಯಲ್ಲಿರುವ ಘಟಕಗಳ ಸಂಬಂಧ ತಾಲ್ಲೂಕುವಾರು ಪಟ್ಟಿ ನೀಡಬೇಕು’ ಎಂದು ಸೂಚಿಸಿದರು.

ಅನುಮೋದನೆ ಪಡೆಯಿರಿ: ‘ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳ ಪಟ್ಟಿಗೆ ಜಿ.ಪಂ ಸಮಿತಿಯಿಂದ ಅನುಮೋದನೆ ಪಡೆಯಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಾಲ್ಲೂಕುವಾರು ವಿದ್ಯಾರ್ಥಿಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆಗಬಾರದು’ ಎಂದು ಹೇಳಿದರು.

ಸಮಿತಿ ಸದಸ್ಯರಾದ ಉಷಾ, ನಾಗವೇಣಿ, ಪಾರ್ವತಮ್ಮ, ಜಿ.ಪಂ ಯೋಜನಾಧಿಕಾರಿ ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.