ADVERTISEMENT

ಅಮೃತ ಮಹೋತ್ಸವ: 41 ಗ್ರಾ.ಪಂ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 15:14 IST
Last Updated 25 ಸೆಪ್ಟೆಂಬರ್ 2021, 15:14 IST
ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೋಲಾರದಲ್ಲಿ ಶನಿವಾರ ನಡೆದ ‘ಫ್ರೀಡಂ ರನ್’ನಲ್ಲಿ ಸಂಸದ ಎಸ್‌.ಮುನಿಸ್ವಾಮಿ ಹಾಗೂ ಯುವಕ ಯುವತಿಯರು ಪಾಲ್ಗೊಂಡರು
ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೋಲಾರದಲ್ಲಿ ಶನಿವಾರ ನಡೆದ ‘ಫ್ರೀಡಂ ರನ್’ನಲ್ಲಿ ಸಂಸದ ಎಸ್‌.ಮುನಿಸ್ವಾಮಿ ಹಾಗೂ ಯುವಕ ಯುವತಿಯರು ಪಾಲ್ಗೊಂಡರು   

ಕೋಲಾರ: ‘ಮುಖ್ಯಮಂತ್ರಿಗಳ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ 41 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿದ್ದು, ಈ ಪಂಚಾಯಿತಿಗಳನ್ನು ಸರ್ವತ್ತೋಮುಖವಾಗಿ ಅಭಿವೃದ್ಧಿಪಡಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಹೇಳಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಫ್ರೀಡಂ ರನ್ 2.0’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಪ್ರಪಂಚದಲ್ಲಿಯೇ ಭಾರತೀಯರು ಪುಣ್ಯವಂತರು. ಭಾರತದಲ್ಲಿ ಹುಟ್ಟಿರುವುದೇ ಹೆಮ್ಮೆ. ದೇಶ ಬಲಿಷ್ಠವಾಗಿದೆ ಎಂಬುದು ಪ್ರಪಂಚಕ್ಕೆ ತಿಳಿದಿದೆ. ಹಲವು ಮಹನೀಯರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಅವರ ಸ್ಮರಣಾರ್ಥ ಫ್ರೀಡಂ ರನ್ ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು.

ADVERTISEMENT

‘ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುತ್ತೇವೆ. ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಎಲ್ಲಾ ರೀತಿಯ ವೈದ್ಯಕೀಯ ಸೇವೆ ಸಿಗಬೇಕು. ಚಿಕಿತ್ಸೆಗಾಗಿ ಯಾರೊಬ್ಬರು ಬೆಂಗಳೂರಿನತ್ತ ಹೋಗಬಾರದು ಎಂಬುದು ನಮ್ಮ ಉದ್ದೇಶ’ ಎಂದು ತಿಳಿಸಿದರು.

‘ಆರೋಗ್ಯವೇ ಭಾಗ್ಯ. ಜನರು ಹಣ ಹಾಗೂ ಆಸ್ತಿ ಸಂಪಾದನೆಗಿಂತ ಆರೋಗ್ಯದತ್ತ ಕಾಳಜಿ ವಹಿಸಬೇಕು. ಕೋವಿಡ್‌ ಹಿನ್ನೆಲೆಯಲ್ಲಿ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕೆಂದು ಜನರಿಗೆ ಅರಿವಾಗಿದೆ. ಪ್ರತಿಯೊಬ್ಬರು ದಿನಕ್ಕೆ ಕನಿಷ್ಠ ಅರ್ಧ ತಾಸು ಯೋಗ ಮಾಡಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಕಿವಿಮಾತು ಹೇಳಿದರು.

‘ದೇಶದ ಜನರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ. ಅ.2ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಪ್ರತಿನಿತ್ಯ ಅರ್ಧ ತಾಸು ವ್ಯಾಯಾಮ ಮಾಡುವ ಮೂಲಕ ದೇಹ ದಂಡಿಸಬೇಕು. ದೇಶದ ಪ್ರತಿ ಪ್ರಜೆಯೂ ಆರೋಗ್ಯಕರವಾಗಿರಬೇಕು’ ಎಂದು ನೆಹರೂ ಯುವ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಎಸ್.ಪಿ.ಪಟ್ನಾಯಕ್ ಆಶಿಸಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್‌ಬಾಬು, ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಸರಣ್ಯಾ, ಯುವಕ ಯುವತಿಯರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.