ADVERTISEMENT

ಕೋಲಾರ: ಎಪಿಎಂಸಿ ಜಾಗದ ಸಮಸ್ಯೆ: ಧರಣಿ

ಜಮೀನು ಮಂಜೂರು ಮಾಡಲು ರೈತ ಸಂಘ ಸದಸ್ಯರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 16:44 IST
Last Updated 28 ಆಗಸ್ಟ್ 2020, 16:44 IST
ಕೋಲಾರ ಎಪಿಎಂಸಿ ಸ್ಥಳಾಂತರಕ್ಕೆ ಜಮೀನು ಮಂಜೂರು ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಶುಕ್ರವಾರ ರಸ್ತೆ ತಡೆ ಮಾಡಿ ಧರಣಿ ನಡೆಸಿದರು.
ಕೋಲಾರ ಎಪಿಎಂಸಿ ಸ್ಥಳಾಂತರಕ್ಕೆ ಜಮೀನು ಮಂಜೂರು ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಶುಕ್ರವಾರ ರಸ್ತೆ ತಡೆ ಮಾಡಿ ಧರಣಿ ನಡೆಸಿದರು.   

ಕೋಲಾರ: ಜಿಲ್ಲಾ ಕೇಂದ್ರದ ಎಪಿಎಂಸಿ ಸ್ಥಳಾಂತರಕ್ಕೆ ಅಗತ್ಯವಿರುವ 40 ಎಕರೆ ಜಮೀನು ಮಂಜೂರು ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ಎಪಿಎಂಸಿ ಬಳಿ ರಸ್ತೆ ತಡೆ ಮಾಡಿ ಧರಣಿ ನಡೆಸಿದರು.

‘ಎಪಿಎಂಸಿ ಆವರಣ ತುಂಬಾ ಕಿರಿದಾಗಿದೆ. ಈ ಸಂಬಂಧ ಎಪಿಎಂಸಿ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತಕ್ಕೆ ದೂರು ಕೊಟ್ಟು ಮಾರುಕಟ್ಟೆ ವಿಸ್ತರಣೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ, ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸುತ್ತಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಎಪಿಎಂಸಿ ಆಡಳಿತ ಮಂಡಳಿಗೆ ಸುಂಕದ ರೂಪದಲ್ಲಿ ಕೋಟಿಗಟ್ಟಲೆ ಆದಾಯ ಬರುತ್ತದೆ. ಆದರೆ, ಆಡಳಿತ ಮಂಡಳಿಯು ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾರುಕಟ್ಟೆ ಅಭಿವೃದ್ಧಿ ನಿರ್ಲಕ್ಷಿಸಿದ್ದಾರೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾದ್ಯಕ್ಷ ಕೆ.ನಾರಾಯಣಗೌಡ ದೂರಿದರು.

ADVERTISEMENT

‘ಏಷ್ಯಾ ಖಂಡದಲ್ಲಿ 2ನೇ ಅತಿ ದೊಡ್ಡ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಯಿಂದ ಟೊಮೆಟೊ ಮತ್ತು ತರಕಾರಿಗಳು ದೇಶ ವಿದೇಶಕ್ಕೆ ರಫ್ತಾಗುತ್ತವೆ. ಆದರೆ, ಮಾರುಕಟ್ಟೆಯಲ್ಲಿನ ಜಾಗದ ಸಮಸ್ಯೆ ಕಾರಣಕ್ಕೆ ವರ್ತಕರು ಈ ಎಪಿಎಂಸಿಗೆ ಬರಲು ಹಿಂದೇಟು ಹಾಕುತ್ತಾರೆ. ಜನಪ್ರತಿನಿಧಿಗಳು ಮಾರುಕಟ್ಟೆಯ ಜಾಗದ ಸಮಸ್ಯೆ ಬಗೆಹರಿಸದೆ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

ಮೀನಮೇಷ: ‘ರಾತ್ರೋರಾತ್ರಿ ಸಾವಿರಾರು ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆಪತ್ರ ಸೃಷ್ಟಿಸಿ ರಿಯಲ್ ಎಸ್ಟೇಟ್ ದಂಧೆಕೋರರಿಗೆ ಮಂಜೂರು ಮಾಡಲು ಜಾಗವಿದೆ. ಆದರೆ, ಮಾರುಕಟ್ಟೆಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಜಮೀನು ಕೊಡಲು ಅಧಿಕಾರಿಗಳು ಮೀನಮೇಷ ಎಣಿಸುತ್ತಾರೆ. ಜಾಗದ ಸಮಸ್ಯೆಯಿಂದಾಗಿ ರೈತರು ಹಾಗೂ ವರ್ತಕರು ಬವಣೆ ಪಡುವಂತಾಗಿದೆ’ ಎಂದು ಧರಣಿನಿರತರು ಅಸಮಾಧಾನ ವ್ಯಕ್ತಪಡಿಸಿದರು.

‘‘ಮಾರುಕಟ್ಟೆಯಲ್ಲಿ ರೈತರ ವಿಶ್ರಾಂತಿಗೆ ಸೂಕ್ತ ವ್ಯವಸ್ಥೆಯಿಲ್ಲ. ಎಪಿಎಂಸಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಿದ್ದು, ನಿಯಮಬಾಹಿರವಾಗಿ ಕಮಿಷನ್ ಪಡೆಯಲಾಗುತ್ತಿದೆ. ಮತ್ತೊಂದೆಡೆ ಕೃಷಿ ಉತ್ಪನ್ನಗಳ ತೂಕದಲ್ಲಿ ಮೋಸ ಮಾಡಲಾಗುತ್ತಿದೆ. ರೈತರು ಈ ಅಕ್ರಮ ಪ್ರಶ್ನಿಸಿದರೆ ಮಂಡಿ ಮಾಲೀಕರು ಹರಾಜು ನಡೆಸುವುದಿಲ್ಲ ಎಂದು ಬೆದರಿಸುತ್ತಾರೆ’ ಎಂದು ಆರೋಪಿಸಿದರು.

ಬಂದ್‌ ಎಚ್ಚರಿಕೆ: ‘ರೈತರು ಹಾಗೂ ವರ್ತಕರಿಗೆ ಅನುಕೂಲವಾಗುವ ಜಾಗಕ್ಕೆ ಎಪಿಎಂಸಿ ಸ್ಥಳಾಂತರಿಸಬೇಕು. ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಸ್ಥಳೀಯ ಎಪಿಎಂಸಿಗೆ ಟೊಮೆಟೊ ತರಿಸುವುದನ್ನು ನಿಲ್ಲಿಸಬೇಕು. ದಲ್ಲಾಳಿ ಹಾವಳಿ ಹಾಗೂ ಕಮಿಷನ್‌ ದಂಧೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕೋಲಾರ ತಾಲ್ಲೂಕು ಬಂದ್‌ಗೆ ಕರೆ ನೀಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಸದಸ್ಯರಾದ ಮಂಜುನಾಥ್, ತಿಮ್ಮಣ್ಣ, ವೆಂಕಟೇಶಪ್ಪ, ನವೀನ್, ಸಾಗರ್, ಸುಧಾಕರ್, ಸುನಿಲ್, ವಿನೋದ್, ವೆಂಕಟೇಶ್, ಕೇಶವ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.