ಕೋಲಾರ: ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಏರಿಕೆ ಖಂಡಿಸಿ ನಗರದ ಹೊರವಲಯದ ಬಸವಶ್ರೀ ಕಾನೂನು ಕಾಲೇಜು ವಿದ್ಯಾರ್ಥಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ ಅವರಿಗೆ ಮನವಿ ಸಲ್ಲಿಸಿದರು.
ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಅಂಬ್ಲಿಕಲ್ ಶಶಿಕುಮಾರ್ ಮಾತನಾಡಿ, ‘ರಾಜ್ಯ ಸರ್ಕಾರವು ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದಲ್ಲಿ ದಾಖಲಾತಿ ಶುಲ್ಕವನ್ನು ವರ್ಷದಿಂದ ವರ್ಷಕ್ಕೆ ಏರಿಕೆ ಮಾಡುತ್ತಿರುವುದರಿಂದ ಮತ್ತು ಪರೀಕ್ಷೆ ಶುಲ್ಕವನ್ನು ಆರು ತಿಂಗಳಿಗೊಮ್ಮೆ ಹೆಚ್ಚಳ ಮಾಡಿರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ’ ಎಂದು ಆರೋಪಿಸಿದರು.
‘ಕಡು ಬಡತನದಿಂದ ಬಂದು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದಾಖಲಾತಿ ಶುಲ್ಕ ಮತ್ತು ಪರೀಕ್ಷಾ ಶುಲ್ಕ ಭರಿಸಲಾಗದೆ ಹೊರೆಯಾಗಿದೆ’ ಎಂದರು.
ಸಂಬಂಧಪಟ್ಟ ಕಾನೂನು ಆಯುಕ್ತ ಶಶಿಕಿರಣ್ ಶೆಟ್ಟಿ ಅವರಿಗೆ ಮನವಿಯನ್ನು ರವಾನೆ ಮಾಡಿದರು. ಅಲ್ಲದೇ, ಹೆಚ್ಚುವರಿ ಕಾಲೇಜು ದಾಖಲಾತಿ ಶುಲ್ಕದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಸವಶ್ರೀ ಕಾನೂನು ಕಾಲೇಜು ವಿದ್ಯಾರ್ಥಿಗಳಾದ ಲಕ್ಷ್ಮಣ್, ಮಹೇಶ್,ಮುನಿರಾಜು, ಸಾಗರ್, ಆಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.