ADVERTISEMENT

ಮನೆಯಿಂದಲೇ ಕೆಲಸ ನಿರ್ವಹಣೆಗೆ ಸಿ.ಎಸ್.ಷಡಕ್ಷರಿ ಮನವಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 14:39 IST
Last Updated 17 ಜೂನ್ 2021, 14:39 IST

ಕೋಲಾರ: ಕೋವಿಡ್‌, ಲಾಕ್‌ಡೌನ್‌ ಹಾಗೂ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮನೆಯಿಂದಲೇ ನಿರ್ವಹಿಸಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರಿಗೆ ಮನವಿ ಮಾಡಿದ್ದಾರೆ.

ಸರ್ಕಾರ ಜೂನ್‌ 15ರಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭಿಸುವಂತೆ ಸೂಚಿಸಿದೆ. ಆದರೆ, ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಅವಕಾಶ ನೀಡಿಲ್ಲ. ಇದರಿಂದ ಶಿಕ್ಷಕರಿಗೆ ಶಾಲೆಗಳಿಗೆ ತೆರಳಲು ಸಮಸ್ಯೆಯಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್‌ಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ತಜ್ಞರ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಶಾಲೆಗಳಲ್ಲಿ ಒಂದೇ ಕೊಠಡಿಯಲ್ಲಿ ಮಕ್ಕಳು, ಶಿಕ್ಷಕರು ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಶಿಕ್ಷಕರಿಗೆ ಮನೆಯಿಂದಲೇ ಶೈಕ್ಷಣಿಕ ಚಟುವಟಿಕೆ ನಿರ್ವಹಿಸಲು ಅವಕಾಶ ನೀಡುವಂತೆ ಷಡಕ್ಷರಿ ಅವರು ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಶಿಕ್ಷಕರಿಗೆ ಪೂರ್ಣ ಪ್ರಮಾಣದಲ್ಲಿ ಕೋವಿಡ್‌ ಲಸಿಕೆ ಹಾಕಿಲ್ಲ. ಮತ್ತೊಂದೆಡೆ ಮಕ್ಕಳಿಗೂ ಲಸಿಕೆ ಹಾಕಿಲ್ಲ. ಈ ಆತಂಕದ ನಡುವೆ ಶಾಲೆಗಳನ್ನು ಭೌತಿಕವಾಗಿ ಆರಂಭಿಸಿದರೆ ಹೆಚ್ಚಿನ ದುಷ್ಪರಿಣಾಮವಾಗುವ ಸಾಧ್ಯತೆಯಿದೆ. ಮಕ್ಕಳು, ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ಆನ್‌ಲೈನ್‌ ತರಗತಿಗಳನ್ನು ಮನೆಯಿಂದಲೇ ನಡೆಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.