ಕೋಲಾರ: ರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ನಗರದ ವಿಭೂತಿಪುರ ನಿವಾಸಿ ಮಂಜುನಾಥ್ (20) ಮತ್ತು ಸತ್ಯಮ್ಮ ಲೇಔಟ್ನ ಶ್ರೀನಾಥ್ (22) ಬಂಧಿತರು. ನಗರದ ಅಂತರಗಂಗೆ ಬೆಟ್ಟದ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಕಾನ್ಸ್ಟೆಬಲ್ ಶಂಕರ್ ಅವರ ಮೇಲೆ ಆರೋಪಿಗಳು ಹಾಗೂ ಅವರ ಇಬ್ಬರು ಸ್ನೇಹಿತರು ಹಲ್ಲೆ ನಡೆಸಿ ಪರಾರಿಯಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳು ಬೆಟ್ಟದಲ್ಲಿನ ದೇವಾಲಯಕ್ಕೆ ಬಂದಿದ್ದ ಸಾರ್ವಜನಿಕರೊಂದಿಗೆ ಮಾರ್ಗ ಮಧ್ಯೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಪ್ರಶ್ನಿಸಿದ ಕಾನ್ಸ್ಟೆಬಲ್ಗಳಾದ ಶಂಕರ್ ಮತ್ತು ಅರುಣ್ ಅವರೊಂದಿಗೆ ಆರೋಪಿಗಳು ವಾಗ್ವಾದ ನಡೆಸಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಅಲ್ಲದೇ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆ ಸಂಬಂಧ ಶಂಕರ್ ಅವರು ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದರು. ಠಾಣೆಯಿಂದ ಹೆಚ್ಚಿನ ಸಿಬ್ಬಂದಿ ಸ್ಥಳಕ್ಕೆ ಹೋಗುವಷ್ಟರಲ್ಲಿ ಆರೋಪಿಗಳ ಪೈಕಿ ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರ ವಿರುದ್ಧ ಸಿಬ್ಬಂದಿ ಮೇಲೆ ಹಲ್ಲೆ, ಪ್ರಾಣ ಬೆದರಿಕೆ ಮತ್ತು ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪರಾರಿಯಾಗಿರುವ ಕೀಲುಕೋಟೆಯ ಗಂಗಾಧರ್ ಮತ್ತು ವಿನೋದ್ನ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.