ಕೋಲಾರ: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ ಅವರು ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರದ ಅತ್ಯುತ್ತಮ ಉಪ ಕಾರ್ಯದರ್ಶಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು ನರೇಗಾ ಯೋಜನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಅಧಿಕಾರಿಗಳನ್ನು ಪ್ರತಿ ವರ್ಷ ಗುರುತಿಸಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡುತ್ತದೆ. 2020–21ನೇ ಸಾಲಿನ ಅತ್ಯುತ್ತಮ ಉಪ ಕಾರ್ಯದರ್ಶಿ ಪ್ರಶಸ್ತಿಗೆ ಸಂಜೀವಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಅದೇ ರೀತಿ ಇಲಾಖೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರಶಸ್ತಿಯು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಗುಲ್ಲಹಳ್ಳಿ ಗ್ರಾ.ಪಂ ಪಿಡಿಒ ಶಿರೀನ್ ತಾಜ್ ಅವರಿಗೆ ಲಭಿಸಿದೆ. ರೇಷ್ಮೆ ಇಲಾಖೆ ಮತ್ತು ಪಂಚಾಯತ್ರಾಜ್ ಎಂಜಿನಿಯರಿಂಗ್ (ಪಿಆರ್ಇಡಿ) ಇಲಾಖೆಗಳು ಅತ್ಯುತ್ತಮ ಸಾಧನೆ ಮಾಡಿದ ಇಲಾಖೆ ಪ್ರಶಸ್ತಿ ಗೌರವಕ್ಕೆ ಪಾತ್ರವಾಗಿವೆ. ಇಲಾಖೆಗಳ ಮುಖ್ಯಸ್ಥರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ನರೇಗಾ ಯೋಜನೆಯ ವಿವಿಧ ವಿಭಾಗಗಳ ಪ್ರಶಸ್ತಿಗೆ ಆಯ್ಕೆಯಾಗಿರುವ ಅಧಿಕಾರಿಗಳು ಮತ್ತು ಇಲಾಖೆ ಮುಖ್ಯಸ್ಥರಿಗೆ ಹುಬ್ಬಳ್ಳಿಯಲ್ಲಿ ಏ.9ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.