ಕೋಲಾರ: ‘ಗೌರಿ ಗಣೇಶ ಹಬ್ಬದ ಅಂಗವಾಗಿ ಗರ್ಭಿಣಿಯರಿಗೆ ಬಾಗಿನ ಅರ್ಪಣೆ ಹಾಗೂ ಪರಿಸರಸ್ನೇಹಿ ಗಣೇಶ ಮೂರ್ತಿಗಳ ವಿತರಣೆ ಕಾರ್ಯಕ್ರಮವನ್ನು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶುಕ್ರವಾರ (ಸೆ.9) ಹಮ್ಮಿಕೊಳ್ಳಲಾಗಿದೆ’ ಎಂದು ಚಂದನವನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಂದನ್ಗೌಡ ತಿಳಿಸಿದರು.
ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಮಾಜ ಸೇವೆ ಭಾಗವಾಗಿ ಕ್ಯಾಲನೂರು, ಅಮ್ಮನಲ್ಲೂರು ಮತ್ತು ಮದ್ದೇರಿ ಗ್ರಾಮದಲ್ಲಿ ಈ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.
‘ಕೋವಿಡ್ ಸಂಕಷ್ಟ ಹಾಗೂ ಲಾಕ್ಡೌನ್ ಸಂದರ್ಭದಲ್ಲಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬಡ ಜನರಿಗೆ ದಿನಸಿ, ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ್ದೆವು. ಅದೇ ರೀತಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸೌಕರ್ಯ ಒದಗಿಸಲಾಗಿತ್ತು’ ಎಂದು ವಿವರಿಸಿದರು.
‘ಸಹೋದರನ ಸ್ಥಾನದಲ್ಲಿ ನಿಂತು ಗರ್ಭಿಣಿಯರಿಗೆ ಬಾಗಿನ ನೀಡುವ ಸಾಂಪ್ರದಾಯಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಾಗಿನದೊಂದಿಗೆ ಪೌಷ್ಟಿಕ ಹಣ್ಣುಗಳು, ಕಾಳು ಹಾಗೂ ಸೀರೆ ನೀಡಲಾಗುವುದು. ಹೋಬಳಿ, ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿಯಂತೆ ಕಾರ್ಯಕ್ರಮ ನಡೆಸುತ್ತೇವೆ’ ಎಂದು ಮಾಹಿತಿ ನೀಡಿದರು.
‘ಸರ್ಕಾರದ ನಿಯಮಾವಳಿಯಂತೆ ಗಣೇಶ ಪ್ರತಿಷ್ಠಾಪನೆ ಮಾಡುವವರಿಗೆ ಪರಿಸರಸ್ನೇಹಿ ಗಣೇಶ ಮೂರ್ತಿ ವಿತರಿಸಲಾಗುವುದು. ಬಾಗಿನ ಮತ್ತು ಗಣೇಶ ಮೂರ್ತಿ ಬಯಸುವವರು 9448402445 ಮೊಬೈಲ್ ಸಂಖ್ಯೆ ಸಂಪರ್ಕಿಸಬಹುದು’ ಎಂದು ತಿಳಿಸಿದರು.
ಟ್ರಸ್ಟ್ನ ಸಲಹೆಗಾರ ಸಿ.ಜಿ.ಮುರಳಿ, ಬೆಳಮಾರನಹಳ್ಳಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ಗೌಡ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.