ಬಂಗಾರಪೇಟೆ: ಇಲ್ಲಿನ ತಾಲ್ಲೂಕು ಆಡಳಿತ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಅಕ್ರಂಪಾಷ ಅವರು ಯಾವುದೇ ಮಾಹಿತಿ ನೀಡದೆ ನೇರವಾಗಿ ಬೂದಿಕೋಟೆಯ ನಾಡಕಚೇರಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯವೈಖರಿಯನ್ನು ಪರಿಶೀಲನೆ ನಡೆಸಿದರು.
ಸಿಬ್ಬಂದಿಯ ಹಾಜರಾತಿ ಪುಸ್ತಕ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಎಲ್ಲ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕಚೇರಿ ಹಾಗೂ ನಿಯೋಜಿಸಿರುವ ಕಂದಾಯ ವೃತ್ತದ ಗ್ರಾಮದ ಕಚೇರಿಯಲ್ಲಿ ಹಾಜರಿರಬೇಕು. ಸಾರ್ವಜನಿಕರು ನೀಡುವ ದೂರಿನ ಅರ್ಜಿಯನ್ನು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಿಕೊಡಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಂದರೆ, ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹೋಬಳಿ ವ್ಯಾಪ್ತಿಯಲ್ಲಿ ನಡೆದ ಪೌತಿ ಖಾತೆ ಆಂದೋಲನದ ಅರ್ಜಿಗಳು ಮತ್ತು ನಡೆಯಬೇಕಿರುವ ಆಂದೋಲನದ ಪ್ರಚಾರದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮುಂದೆ ನಡೆಯಲಿರುವ ಪೌತಿ ಖಾತೆ ಆಂದೋಲನಕ್ಕೆ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸುವಂತೆ ಮಾಡಲು ವ್ಯಾಪಕ ಪ್ರಚಾರ ಮಾಡಬೇಕು. ಗರಿಷ್ಟ ಸಂಖ್ಯೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಪೌತಿ ಖಾತೆಗಳನ್ನು ಮಾಡಿಸಬೇಕು ಎಂದು ಸೂಚಿಸಿದರು.
ಮೃತಪಟ್ಟವರ ಖಾತೆಗಳು ಬೇರೆಯವರಿಗೆ ವರ್ಗಾವಣೆ ಆದರೆ ಮಾತ್ರ ಬಾಕಿ ಇರುವ ಖಾತೆಗೆ ಆಧಾರ್ ಜೋಡಣೆ ಮಾಡಲು ಸಾಧ್ಯ. ಇದನ್ನು ಮನದಲ್ಲಿ ಇಟ್ಟುಕೊಂಡು ಪ್ರಚಾರ ಮಾಡಿ ಆಂದೋಲನ ಯಶಸ್ವಿಗೊಳಿಸಬೇಕು ಎಂದರು.
ಈ ವೇಳೆ ರಾಜಸ್ವ ನಿರೀಕ್ಷಕ ಪವನ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ವಿನೋದ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.