ADVERTISEMENT

ಸರ್ವರ್ ಸಮಸ್ಯೆ: ಪಡಿತರಕ್ಕೆ ಫಲಾನುಭವಿಗಳ ಪರದಾಟ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 4:27 IST
Last Updated 22 ನವೆಂಬರ್ 2020, 4:27 IST
ಬಂಗಾರಪೇಟೆ ತಾಲ್ಲೂಕಿನಲ್ಲಿ ಆಹಾರ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ನ್ಯಾಯಬೆಲೆ ಅಂಗಡಿ ಮುಂದೆ ಕಾಯುತ್ತಿರುವುದು
ಬಂಗಾರಪೇಟೆ ತಾಲ್ಲೂಕಿನಲ್ಲಿ ಆಹಾರ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ನ್ಯಾಯಬೆಲೆ ಅಂಗಡಿ ಮುಂದೆ ಕಾಯುತ್ತಿರುವುದು   

ಬಂಗಾರಪೇಟೆ: ಸರ್ವರ್ ಸಮಸ್ಯೆಯಿಂದಾಗಿ ತಾಲ್ಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಪದಾರ್ಥಗಳನ್ನು ಸಮಯಕ್ಕೆ ಸರಿಯಾಗಿ ವಿತರಿಸುತ್ತಿಲ್ಲ. ಹಾಗಾಗಿ ಪಡಿತರ ಚೀಟಿದಾರರು ನಿತ್ಯ ಅಂಗಡಿಗಳ ಮುಂದೆ ಕಾಯುವ ಅನಿವಾರ್ಯತೆ ತಲೆದೋರಿದೆ.

ದೀಪಾವಳಿ ಹಬ್ಬದ ಬಳಿಕ ತಾಲ್ಲೂಕಿನಲ್ಲಿ ಆಹಾರ ಇಲಾಖೆಯ ಸರ್ವರ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕಳೆದ ಐದು ದಿನಗಳಿಂದಲೂ ಅಕ್ಕಿ ವಿತರಣೆಗೆ ಬಯೊಮೆಟ್ರಿಕ್ ಪಡೆಯಲು ಸಾಧ್ಯವಾಗದೆ ನ್ಯಾಯಬೆಲೆ ಅಂಗಡಿ ಮಾಲೀಕರು ಪರದಾಡುತ್ತಿದ್ದಾರೆ. ಅಕ್ಕಿ ಪಡೆಯಲು ಪಡಿತರದಾರರು ಇಡೀ ದಿನ ಕಾಯ್ದು ಮನೆಗೆ ಹಿಂತಿರುಗುವ ಪರಿಸ್ಥಿತಿ ಉಂಟಾಗಿದೆ.

ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಸಮಸ್ಯೆ ಹೆಚ್ಚಾಗಿದೆ. ತಿಂಗಳ ಅಂತ್ಯ ಸಮೀಪಿಸುತ್ತಿದ್ದರೂ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡುದಾರರಿಗೆ ಅಕ್ಕಿ ವಿತರಣೆ ಮಾಡಲಾಗುತ್ತಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಪಡಿತರದಾರರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೆ ತಿಂಗಳ 1ನೇ ತಾರೀಖಿನಿಂದಲೇ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕಾರಿಗಳು ಅಕ್ಕಿ ಸರಬರಾಜು ಮಾಡುತ್ತಿದ್ದರು. ಅಂದಿನಿಂದಲೇ ವಿತರಣೆ ನಡೆಯುತ್ತಿತ್ತು. ಆದರೆ, ಈಗ ಪ್ರತಿ ತಿಂಗಳು 11ರ ಬಳಿಕವೇ ಪಡಿತರ ವಿತರಣೆ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿರುವುದು ಮತ್ತೊಂದು ಸಮಸ್ಯೆಗೆ ಕಾರಣವಾಗಿದೆ.

ADVERTISEMENT

ತಿಂಗಳ ಆರಂಭದಲ್ಲಿ ಸರ್ವರ್ ಚೆನ್ನಾಗಿದ್ದು, ಮಧ್ಯೆದಲ್ಲಿ ಕೈಕೊಡುತ್ತಿರುವುದರಿಂದ ಬಡವರು ಅನ್ನಭಾಗ್ಯದಿಂದ ವಂಚಿತರಾಗುತ್ತಿದ್ದಾರೆ ಎನ್ನುವುದು ಪಡಿತರ ಅಂಗಡಿ ಮಾಲೀಕರ ಆರೋಪ.

‘ಇಲಾಖೆಯ ಅಧಿಕಾರಿಗಳು ಸರ್ವರ್ ಸಮಸ್ಯೆ ಸರಿಪಡಿಸದಿದ್ದರೆ ಪಡಿತರ ಚೀಟಿದಾರರು ಒಟ್ಟಾಗಿ ತಾಲ್ಲೂಕು ಕಚೇರಿ ಮುಂದೆ ಹೋರಾಟ ಮಾಡಲಾಗುವುದು’ ಎಂದು ಪಡಿತರದಾರ ಮುರಳಿ ಪ್ರತಿಕ್ರಿಯಿಸಿದರು. ‘ಜಿಲ್ಲೆಯಾದ್ಯಂತ ಆಹಾರ ಇಲಾಖೆಯ ಸರ್ವರ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಬೆಂಗಳೂರಿನಲ್ಲಿ ಸೂಕ್ತ ನಿರ್ವಹಣೆ ಮಾಡದ ಕಾರಣ ಸಮಸ್ಯೆಯಾಗುತ್ತಿದೆ’ ಎಂದು ಆಹಾರ ನಿರೀಕ್ಷಕ ಲೋಕೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.