
ಮಾಲೂರು: ಈ ಸಾಲಿನ ಬಜೆಟ್ನಲ್ಲಿ ಕೋಲಾರ ಜಿಲ್ಲೆಗೆ ಎಂದೂ ದೊರೆಯದ ಯೊಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ತಾಲ್ಲೂಕು ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋಲಾರ ಜಿಲ್ಲೆಗೆ 8 ಯೋಜನೆಗಳನ್ನು ನೀಡಿದ್ದು, ಮಾಲೂರಿಗೆ ಹೆಚ್ಚು ಅನುದಾನಗಳನ್ನು ಘೋಷಣೆ ಮಾಡಿದ್ದಾರೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದ ಆಧಾರದಲ್ಲಿ ವೈದೈಕೀಯ ಕಾಲೇಜು ಆರಂಭಿಸಲು ಅವಕಾಶ ಕಲ್ಪಿಸಿದ್ದಾರೆ. ಮಾಲೂರಿನ ಸರ್ಕಾರಿ ಆಸ್ಪತ್ರೆ ಕಟ್ಟಡ ಶಿಥಿಲವಾಗಿತ್ತು. ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್ ನಲ್ಲಿ ₹41 ಕೋಟಿ ಘೋಷಣೆ ಮಾಡಲಾಗಿದೆ. ಈಗಾಗಲೇ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಟೀಕಲ್ ರಸ್ತೆಯಲ್ಲಿ ಸುಮಾರು 12 ಎಕರೆ ಸರ್ಕಾರಿ ಭೂಮಿಯನ್ನು ಗುರ್ತಿಸಲಾಗಿದೆ ಎಂದರು.
ಜಿಲ್ಲೆಯ ನರಸಾಪುರದಲ್ಲಿ ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ₹173 ಕೋಟಿ ವೆಚ್ಚದಲ್ಲಿ 6 ಸಾವಿರ ಸಾಮಾರ್ಥ್ಯದ ಮಹಿಳಾ ವಸತಿ ನಿಯಗಳನ್ನು ನಿರ್ಮಿಸಲಾಗುವುದು. ಕೆಜಿಎಫ್ ಬಳಿ ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು ಸ್ಥಾಪಿಸಲು ₹40 ಕೋಟಿ ಅನುದಾನ ಕೊಟ್ಟಿದ್ದಾರೆ. ಅಲ್ಲದೆ, ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆಗೆ, ಕೋಲಾರದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ ಅನುದಾನ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.
ಮಾಜಿ ಶಾಸಕ ಎ.ನಾಗರಾಜು , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್ , ತಾಲ್ಲೂಕು ಅಧ್ಯಕ್ಷ ವಿಜಯನಾರಸಿಂಹ, ಪುರಸಭೆ ಅಧ್ಯಕ್ಷೆ ಕೋಮಾಲಾ ನಾರಾಯಣ್, ನಗರ ಪ್ರಾಧಿಕಾರದ ಅಧ್ಯಕ್ಷ ಆಹಮದ್ ನಯುಂ ಉಲ್ಲಾ, ದಾರ್ಖಾಸ್ತು ಸಮಿತಿ ಅಧ್ಯಕ್ಷ ಹನುಮಂತಪ್ಪ, ನಾರಾಯಣಸ್ವಾಮಿ, ಮುಖಂಡರಾದ ಹಮುಮಂತಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜಪ್ಪ, ಸದಸ್ಯರಾದ ವೆಂಕಟೇಶ್ ಇನ್ನಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.