ಕೋಲಾರ: ‘ಈ ಬಾರಿಯೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. 2029ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ನಾನು ಕಾಂಗ್ರೆಸ್ ಶಾಸಕನಾದರೂ ನಿಜ ಮಾತನಾಡಬೇಕು’ ಎಂದು ಕೋಲಾರ ಶಾಸಕ
ಕೊತ್ತೂರು ಮಂಜುನಾಥ್ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಸಮೀಕ್ಷೆಗಳೂ
ಬಿಜೆಪಿ ಅಧಿಕಾರಕ್ಕೆ ಬರುತ್ತಿವೆ ಎಂದು ಹೇಳುತ್ತಿವೆ. ಎಲ್ಲರ ರೀತಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ನಾನು ಸುಳ್ಳು ಹೇಳಲ್ಲ. ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎಂಬುದು ಮೊದಲೇ ಗೊತ್ತಿದ್ದ ವಿಚಾರ. ಈ ಸಲ
ಅವರೇ ಬರಲಿ. ನಮ್ಮ ಗುರಿ 2029ಕ್ಕೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ನಾವು ಈಗಿನಿಂದಲೇ ಪೂರ್ವ ತಯಾರಿ ನಡೆಸುತ್ತೇವೆ’ ಎಂದು ಅವರು ಹೇಳಿದರು.
‘ರಾಜ್ಯದ ವಿಚಾರಕ್ಕೆ ಬಂದರೆ 50:50 ಇದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ
ಕಾಂಗ್ರೆಸ್ ಅಭ್ಯರ್ಥಿ 29 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ’ ಎಂದು ಹೇಳಿದರು.
ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಮೇಲ್ಮನೆ ಅವಕಾಶ ಕೈತಪ್ಪಿದ್ದರ ಬಗ್ಗೆ ಪ್ರತಿಕ್ರಿಯಿಸಿ, ‘ರಮೇಶ್ ಕುಮಾರ್ ಅವರೇನೂ ತಮಗೆ ಪರಿಷತ್ ಸ್ಥಾನ ಬೇಕೆಂದು ಕೇಳಿಲ್ಲ. ಅವರನ್ನು ಮೇಲ್ಮನೆಗೆ ಕಳುಹಿಸಲು ನಾವೆಲ್ಲಾ ಜಿಲ್ಲೆಯ ಶಾಸಕರು ಪ್ರಯತ್ನ ನಡೆಸಿದೆವು. ಆದರೆ, ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ’ ಎಂದರು.
‘ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಬದಲಾವಣೆ ಆದಾಗ ಜಿಲ್ಲೆಗೆ ಸಚಿವ ಸ್ಥಾನ ಸಿಗಬಹುದು’ ಎಂದು ಕೊತ್ತೂರು ಮಂಜುನಾಥ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.