ADVERTISEMENT

ಬಿಜೆಪಿಯ ಕೃಷಿ ವಿರೋಧಿ ನೀತಿ: ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 15:40 IST
Last Updated 21 ಜೂನ್ 2021, 15:40 IST
ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಕಾಂಗ್ರೆಸ್‌ ಕಿಸಾನ್‌ ಖೇತ್‌ ಜಿಲ್ಲಾ ಘಟಕದ ವತಿಯಿಂದ ಕೋಲಾರದಲ್ಲಿ ಸೋಮವಾರ ಜನರಿಗೆ ತರಕಾರಿ ವಿತರಿಸಿದರು
ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಕಾಂಗ್ರೆಸ್‌ ಕಿಸಾನ್‌ ಖೇತ್‌ ಜಿಲ್ಲಾ ಘಟಕದ ವತಿಯಿಂದ ಕೋಲಾರದಲ್ಲಿ ಸೋಮವಾರ ಜನರಿಗೆ ತರಕಾರಿ ವಿತರಿಸಿದರು   

ಕೋಲಾರ: ‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಟೀಕಿಸಿದರು.

ಕಾಂಗ್ರೆಸ್‌ ಕಿಸಾನ್‌ ಖೇತ್‌ ಜಿಲ್ಲಾ ಘಟಕದ ವತಿಯಿಂದ ಇಲ್ಲಿ ಸೋಮವಾರ ತರಕಾರಿ ವಿತರಿಸಿ ಮಾತನಾಡಿ, ‘ಬಿಜೆಪಿ ಸರ್ಕಾರವು ರಸಗೊಬ್ಬರ ಹಾಗೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ರೈತರು ಮತ್ತು ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ’ ಎಂದು ಕಿಡಿಕಾರಿದರು.

‘ರೈತರು ಬೆಳೆದ ತರಕಾರಿಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲ. ಮತ್ತೊಂದೆಡೆ ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತರಿಗೆ ಮತ್ತು ಬಡ ಜನರಿಗೆ ಅನುಕೂಲಕ್ಕಾಗಿ ರೈತರಿಂದ ತರಕಾರಿ ಖರೀದಿಸಿ ಹಂಚಲಾಗುತ್ತಿದೆ. ಸರ್ಕಾರಗಳು ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ ರೈತರ ನೆರವಿಗೆ ಧಾವಿಸಬೇಕು’ ಎಂದು ಹೇಳಿದರು.

ADVERTISEMENT

‘ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ತೈಲೋತ್ಪನ್ನಗಳ ಬೆಲೆ ಗಗನಕ್ಕೇರಿದ್ದು, ಜನರ ಬದುಕು ಬರ್ಬರವಾಗಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಿದ್ದು, ಜನರು ಒಂದೊತ್ತಿನ ಊಟಕ್ಕೂ ಬವಣೆ ಪಡುವಂತಾಗಿದೆ. ಇದಕ್ಕೆ ಕೇಂದ್ರದ ದುರಾಡಳಿತ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸದೆ ಬಡ ಮತ್ತು ಮಧ್ಯಮ ವರ್ಗದ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿವೆ. ಬಿಜೆಪಿಗೆ ಜನಪರ ಕಾಳಜಿಯಿಲ್ಲ. ಜನರ ಹಿತ ಕಾಪಾಡುವಲ್ಲಿ ವಿಫಲವಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಗುಡುಗಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಎಸ್.ಮಂಜುನಾಥ್, ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ಕಾಂಗ್ರೆಸ್‌ ಕಿಸಾನ್‌ ಖೇತ್‌ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್‌, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.