ADVERTISEMENT

ಸರ್ಕಾರಕ್ಕೆ ಶಕ್ತಿ ತುಂಬಿದ ಪದವೀಧರರು: ವೈಎಎನ್‌

ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 15:54 IST
Last Updated 11 ನವೆಂಬರ್ 2020, 15:54 IST
ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜಯ ಗಳಿಸಿದ ಬಿಜೆಪಿಯ ಚಿದಾನಂದಗೌಡ ಮತ್ತು ಅವರ ಗೆಲುವಿಗೆ ಶ್ರಮಿಸಿದ ವಿಧಾನ ಪರಿಷತ್‌ ವೈ.ಎ.ನಾರಾಯಣಸ್ವಾಮಿ ಅವರನ್ನು ಪಕ್ಷದ ಕಾರ್ಯಕರ್ತರು ಬುಧವಾರ ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.
ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜಯ ಗಳಿಸಿದ ಬಿಜೆಪಿಯ ಚಿದಾನಂದಗೌಡ ಮತ್ತು ಅವರ ಗೆಲುವಿಗೆ ಶ್ರಮಿಸಿದ ವಿಧಾನ ಪರಿಷತ್‌ ವೈ.ಎ.ನಾರಾಯಣಸ್ವಾಮಿ ಅವರನ್ನು ಪಕ್ಷದ ಕಾರ್ಯಕರ್ತರು ಬುಧವಾರ ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.   

ಕೋಲಾರ: ‘ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಯಡಿಯೂರಪ್ಪರ ಸರ್ಕಾರಕ್ಕೆ ಶಕ್ತಿ ತುಂಬಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡು ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಅವರು ಗೆಲುವು ಸಾಧಿಸಿದ ಬಳಿಕ ನಡೆದ ವಿಜಯೋತ್ಸವದಲ್ಲಿ ಮಾತನಾಡಿದರು.

‘ಚಿದಾನಂದಗೌಡ ಅವರು 7,037 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ವಿಧಾನಸಭೆ ಉಪ ಚುನಾವಣೆ ಜತೆಗೆ ವಿಧಾನ ಪರಿಷತ್ ಚುನಾವಣೆಯಲ್ಲೂ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ವಿಪಕ್ಷಗಳ ಟೀಕೆ, ಆರೋಪಗಳಿಗೆ ಮನ್ನಣೆ ನೀಡದ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ಕೆ ಬೆಂಬಲ ನೀಡಿದ್ದಾರೆ’ ಎಂದರು.

ADVERTISEMENT

‘ಶಿಕ್ಷಕರು, ಸರ್ಕಾರಿ ನೌಕರರು ಮತ್ತು ಪದವೀಧರರ ಸಮಸ್ಯೆಗಳ ಪರಿಹಾರ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ಚಿದಾನಂದಗೌಡರು ಆಯ್ಕೆ ಆಗಿರುವುದರಿಂದ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರು ಮತ್ತು ಪದವೀಧರರ ಧ್ವನಿ ಮತ್ತಷ್ಟು ಬಲಗೊಳ್ಳಲಿದೆ. ಶಿಕ್ಷಕರ, ನೌಕರರ ಬಹುದಿನಗಳ ಸಮಸ್ಯೆಗಳನ್ನು ಪರಿಹರಿಸಲು ಶಕ್ತಿ ಬಂದಿದೆ’ ಎಂದು ತಿಳಿಸಿದರು.

‘ಚುನಾವಣಾ ಸೋಲಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವವೇ ಅಲುಗಾಡುತ್ತಿದೆ. ಆ ಪಕ್ಷದ ನಾಯಕರಿಗೆ ಕಾಂಗ್ರೆಸ್‌ನಲ್ಲಿ ತಮಗೆ ಭವಿಷ್ಯವಿಲ್ಲ ಎಂಬ ಆತಂಕ ಶುರುವಾಗಿದೆ. ಈ ಚುನಾವಣೆಗಳು ಮುಂದಿನ 10 ವರ್ಷ ರಾಜ್ಯದಲ್ಲಿ ಬಿಜೆಪಿಯೇ ಸಾರ್ವಭೌಮ ಎಂಬುದನ್ನು ಸಾಕ್ಷೀಕರಿಸಿವೆ. ಕಾರ್ಯಕರ್ತರು, ಶಿಕ್ಷಕರ ಸಂಘಟನೆಗಳು, ಪದವೀಧರರ ಸಂಘಟಿತ ಹೋರಾಟದಿಂದ ಈ ಗೆಲುವು ಲಭಿಸಿದೆ’ ಎಂದು ಸಂತಸ ವ್ಯಕ್ತಪಡಿಸಿದರು.

ಸಮಸ್ಯೆಗೆ ಸ್ಪಂದಿಸುವೆ: ‘ನನ್ನ ಗೆಲುವು ಎಲ್ಲಾ ಶಿಕ್ಷಕರು, ಪದವೀಧರರ ಗೆಲುವಾಗಿದೆ. ನನ್ನ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವೈ.ಎ.ನಾರಾಯಣಸ್ವಾಮಿ ಮಾರ್ಗದರ್ಶನದಲ್ಲಿ ಸಮಸ್ಯೆಗಳಿಗೆ ಸ್ಪಂದಿಸುವೆ’ ಎಂದು ವಿಜೇತ ಅಭ್ಯರ್ಥಿ ಚಿದಾನಂದಗೌಡ ಭರವಸೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ್, ಉಪಾಧ್ಯಕ್ಷ ನಾರಾಯಣಸ್ವಾಮಿ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.