ADVERTISEMENT

ಬುಡ್ಗ ಜಂಗಮ: ಜಾತಿ ಪ್ರಮಾಣಪತ್ರ ಭರವಸೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2019, 15:44 IST
Last Updated 2 ಅಕ್ಟೋಬರ್ 2019, 15:44 IST
ಅಲೆಮಾರಿ ಬುಡ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಜಾತಿ ಪ್ರಮಾಣಪತ್ರ ನೀಡುವಂತೆ ಸಂಸದ ಮುನಿಸ್ವಾಮಿ ಅವರಿಗೆ ಮನವಿ ಸಲ್ಲಿಸಲು ಕೋಲಾರದ ಗಾಂಧಿವನದ ಬಳಿ ಬುಧವಾರ ಕಾದು ನಿಂತಿದ್ದರು.
ಅಲೆಮಾರಿ ಬುಡ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಜಾತಿ ಪ್ರಮಾಣಪತ್ರ ನೀಡುವಂತೆ ಸಂಸದ ಮುನಿಸ್ವಾಮಿ ಅವರಿಗೆ ಮನವಿ ಸಲ್ಲಿಸಲು ಕೋಲಾರದ ಗಾಂಧಿವನದ ಬಳಿ ಬುಧವಾರ ಕಾದು ನಿಂತಿದ್ದರು.   

ಕೋಲಾರ: ಸಂಸದ ಎಸ್.ಮುನಿಸ್ವಾಮಿ ಅವರಿಗೆ ಅಲೆಮಾರಿ ಬುಡ್ಗ ಜಂಗಮ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ವಿತರಣೆ ಭರವಸೆ ನೀಡಿದ ಹಿನ್ನಲೆಯಲ್ಲಿ ಸಮುದಾಯದ ಮುಖಂಡರು ಗಾಂಧಿ ಜಯಂತಿ ಬಹಿಷ್ಕರಿಸುವ ಹಾಗೂ ಅನಿರ್ದಿಷ್ಟಾವಧಿ ಧರಣಿ ನಡೆಸುವ ನಿರ್ಧಾರದಿಂದ ಹಿಂದೆ ಸರಿದರು.

ಅಧಿಕಾರಿಗಳು ಬುಡ್ಗ ಜಂಗಮ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ನೀಡದ ಹಿನ್ನೆಲೆಯಲ್ಲಿ ಸಮುದಾಯದ ಮುಖಂಡರು ಗಾಂಧಿ ಜಯಂತಿ ಬಹಿಷ್ಕರಿಸಲು ಹಾಗೂ ಅ.3ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲು ಕರೆ ಕೊಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಇಲ್ಲಿ ಬುಧವಾರ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದ ಸಂಸದ ಮುನಿಸ್ವಾಮಿ, ‘ಜಾತಿ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳುತ್ತೇವೆ. ಆದ್ದರಿಂದ ಧರಣಿ ಮಾಡಬೇಡಿ. ಗಾಂಧಿ ಜಯಂತಿ ಆಚರಣೆಗೆ ಸಹಕರಿಸಿ’ ಎಂದು ಮನವಿ ಮಾಡಿದರು.

ADVERTISEMENT

ಇದಕ್ಕೆ ಸ್ಪಂದಿಸಿದ ಸಮುದಾಯದ ಮುಖಂಡರು ಧರಣಿ ನಿರ್ಧಾರವನ್ನು ತಾತ್ಕಾಲಿಕವಾಗಿ ಕೈಬಿಟ್ಟು ಗಾಂಧಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡರು. ಸುದ್ದಿಗಾರರೊಂದಿಗೆ ಮಾತನಾಡಿದ ಅಲೆಮಾರಿ ಬುಡಕಟ್ಟು ಮಹಾಸಭಾ ಪ್ರಧಾನ ಕಾರ್ಯದರ್ಶಿ ಮುರುಗೇಶ್, ‘ಅಧಿಕಾರಿಗಳು ಸಮುದಾಯದ ಮಕ್ಕಳಿಗೆ ಜಾತಿ ಪ್ರಮಾಣಪತ್ರ ನೀಡದ ಕಾರಣ ಶೈಕ್ಷಣಿಕವಾಗಿ ಸಾಕಷ್ಟು ಸಮಸ್ಯೆಯಾಗಿದೆ. ಸಮುದಾಯದವರು ಸರ್ಕಾರದ ಸವಲತ್ತುಗಳಿಂದ ವಂಚಿತರಾಗಿದ್ದಾರೆ’ ಎಂದರು.

‘ಪಡಿತರ ಚೀಟಿಗೆ ಜಾತಿ ಪ್ರಮಾಣಪತ್ರ ಕಡ್ಡಾಯ ಮಾಡಲಾಗಿದೆ. 8 ವರ್ಷದಿಂದ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಸಿಗದೆ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಈ ಸಂಗತಿಯನ್ನು ಸಂಸದರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಅವರು ಜಾತಿ ಪ್ರಮಾಣಪತ್ರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.