ಕೋಲಾರ: ‘ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತ ಭವನಕ್ಕೆ ಕೆಎಸ್ಆರ್ಟಿಸಿ ಬಸ್ ಸೌಲಭ್ಯ- ಕಲ್ಪಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.
ಇಲ್ಲಿ ಬುಧವಾರ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು (ಎಸ್ಬಿಐ) ಜಿಲ್ಲಾಡಳಿತ ಭವನ ಶಾಖೆ ಉದ್ಘಾಟಿಸಿ ಮಾತನಾಡಿ, ‘ಸಾರ್ವಜನಿಕರು ಕಾರ್ಯನಿಮಿತ್ತ ಹಾಗೂ ಅನೇಕ ಸೇವೆ ಪಡೆಯಲು ಪ್ರತಿನಿತ್ಯ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಿಲ್ಲಾ ಕೇಂದ್ರದ ಕೆಎಸ್ಆರ್ಟಿಸಿ ನಿಲ್ದಾಣದಿಂದ ಜಿಲ್ಲಾಡಳಿತ ಭವನದವರೆಗೆ ಬಸ್ ಸೌಕರ್ಯದ ವ್ಯವಸ್ಥೆ ಮಾಡುತ್ತೇವೆ’ ಎಂದರು.
‘ಖಜಾನೆ ಇಲಾಖೆಯನ್ನು ಸಂಪೂರ್ಣ ಗಣಕೀಕರಣಗೊಳಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಲು ಬ್ಯಾಂಕ್ನ ಸಹಕಾರ ಮುಖ್ಯ. ಎಸ್ಬಿಎಂ ಬ್ಯಾಂಕ್ ಮೊದಲು ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಎಸ್ಬಿಐನಲ್ಲಿ ವಿಲೀನವಾದ ನಂತರ ಎಸ್ಬಿಎಂ ಸಾರ್ವಜನಿಕ ವಲಯದಲ್ಲಿ ದೊಡ್ಡ ಬ್ಯಾಂಕ್ ಆಗಿದೆ’ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಚ್ ಪುಷ್ಪಲತಾ, ಎಸ್ಬಿಐ ಶಾಖೆ ವ್ಯವಸ್ಥಾಪಕ ಸುಮಿತ್ ಜೋಷಿ, ವ್ಯವಸ್ಥಾಪಕ ನಿರ್ದೇಶಕ ಎಸ್.ಮುರಳೀಧರನ್, ಉಪ ಪ್ರಧಾನ ವ್ಯವಸ್ಥಾಪಕ ಸಂಜಯ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.