ADVERTISEMENT

ಜಿಲ್ಲೆಯಲ್ಲಿ ಬಸ್‌ ಸೇವೆ ಪುನರಾರಂಭ

ಸಾರಿಗೆ ನೌಕರರ ಮುಷ್ಕರ ಅಂತ್ಯ: ಕರ್ತವ್ಯಕ್ಕೆ ಹಾಜರು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 14:51 IST
Last Updated 14 ಡಿಸೆಂಬರ್ 2020, 14:51 IST
ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕೋಲಾರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸೋಮವಾರ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.
ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕೋಲಾರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸೋಮವಾರ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.   

ಕೋಲಾರ: ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಕಳೆದ 4 ದಿನದಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯಗೊಂಡಿದ್ದು, ಜಿಲ್ಲೆಯಲ್ಲಿ ಸೋಮವಾರ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಪುನರಾರಂಭವಾಯಿತು.

ಮುಷ್ಕರದ ನಡುವೆಯೂ ಜಿಲ್ಲೆಯ ಹಲವೆಡೆ ಬೆಳಿಗ್ಗೆ ಪೊಲೀಸ್‌ ಭದ್ರತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ರಸ್ತೆಗೆ ಇಳಿಸಲಾಯಿತು. ಸಂಸ್ಥೆ ಅಧಿಕಾರಿಗಳು ಖುದ್ದು ನಿರ್ವಾಹಕರು ಹಾಗೂ ಚಾಲಕರ ಮನೆಗೆ ತೆರಳಿ ಮನವೊಲಿಸಿ ಕೆಲಸಕ್ಕೆ ಕರೆತಂದರು.

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಪಟ್ಟು ಹಿಡಿದಿದ್ದ ಚಾಲಕರು ಹಾಗೂ ನಿರ್ವಾಹಕರಲ್ಲಿ ಕೆಲವರು ಒಲ್ಲದ ಮನಸ್ಸಿನಿಂದಲೇ ಕರ್ತವ್ಯಕ್ಕೆ ಹಾಜರಾದರು. ಮುನ್ನೆಚ್ಚರಿಕೆ ಕ್ರಮವಾಗಿ ಬಸ್‌ ನಿಲ್ದಾಣಗಳು ಮತ್ತು ಡಿಪೊಗಳ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ADVERTISEMENT

ಮಧ್ಯಾಹ್ನದವರೆಗೆ ಗ್ರಾಮೀಣ ಭಾಗಕ್ಕೆ ಬೆರಳೆಣಿಕೆ ಬಸ್‌ ಸಂಚರಿಸಿದವು. ಮುಷ್ಕರದ ಕಾರಣಕ್ಕೆ 4 ದಿನದಿಂದ ಪ್ರಯಾಣಿಕರಿಲ್ಲದೆ ಭಣಗುಡುತ್ತಿದ್ದ ನಿಲ್ದಾಣಗಳಲ್ಲಿ ಸೋಮವಾರ ಪ್ರಯಾಣಿಕರು ಕಂಡುಬಂದರು. ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಬಸ್‌ಗಳ ಓಡಾಟ ಕಡಿಮೆಯಿದ್ದ ಕಾರಣ ಪ್ರಯಾಣಿಕರು ಬಸ್‌ಗಾಗಿ ಗಂಟೆಗಟ್ಟಲೇ ಕಾಯುವಂತಾಯಿತು.

ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಪ್ರಮುಖ ಊರುಗಳಿಗೆ ಗಂಟೆಗೊಂದರಂತೆ ಬಸ್‌ ಓಡಿಸಲಾಯಿತು. ಕೆಲ ಮಾರ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಬಾರದಿದ್ದರಿಂದ ಪ್ರಯಾಣಿಕರು ಅನಿವಾರ್ಯವಾಗಿ ಖಾಸಗಿ ಬಸ್‌ಗಳಲ್ಲಿ ಸಂಚರಿಸಿದರು. ಮುಷ್ಕರದ ವಿಷಯ ತಿಳಿದಿದ್ದವರು ಕೆಎಸ್‌ಆರ್‌ಟಿಸಿ ನಿಲ್ದಾಣಗಳತ್ತ ಬರಲೇ ಇಲ್ಲ. ಬದಲಿಗೆ ಖಾಸಗಿ ಬಸ್‌, ಆಟೊ ಹಾಗೂ ಟೆಂಪೊ ಟ್ರಾವೆಲರ್‌ಗಳ ಮೊರೆ ಹೋದರು.

ದುಪ್ಪಟ್ಟು ದರ: ಖಾಸಗಿ ಬಸ್‌ ಮತ್ತು ವಾಹನಗಳ ಮಾಲೀಕರು ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಪರ್ಯಾಯವಾಗಿ ಸೇವೆ ಒದಗಿಸಿದ್ದರಿಂದ ಜನತೆಗೆ ಮುಷ್ಕರದ ಬಿಸಿ ಹೆಚ್ಚಾಗಿ ತಟ್ಟಲಿಲ್ಲ. ಆದರೆ, ಖಾಸಗಿ ವಾಹನಗಳಲ್ಲಿ ದುಪ್ಪಟ್ಟು ಪ್ರಯಾಣ ದರ ಪಡೆಯುತ್ತಿದ್ದರಿಂದ ಜನರಿಗೆ ಆರ್ಥಿಕವಾಗಿ ಹೊರೆಯಾಯಿತು.

ಮುಷ್ಕರದ ಪರಿಣಾಮ ಜಿಲ್ಲೆಯ 5 ಕೆಎಸ್‌ಆರ್‌ಟಿಸಿ ಡಿಪೊಗಳಲ್ಲೂ ಬಸ್‌ಗಳು ನಿಂತಲ್ಲೇ ನಿಂತು ಸಂಸ್ಥೆಗೆ 4 ದಿನಗಳಿಂದ ಸುಮಾರು ₹ 1.68 ಕೋಟಿ ಆದಾಯ ಖೋತಾ ಆಗಿದೆ.

ನೌಕರರ ಸಂಭ್ರಮ: ನಿಲ್ದಾಣಗಳಲ್ಲಿ ಸಂಜೆಯ ನಂತರ ಹೆಚ್ಚಿನ ಜನಸಂದಣಿ ಕಂಡುಬಂತು. ಮುಷ್ಕರದ ಕಾರಣಕ್ಕೆ ಕರ್ತವ್ಯಕ್ಕೆ ಗೈರಾಗಿದ್ದ ಕೆಎಸ್‌ಆರ್‌ಟಿಸಿ ಚಾಲಕರು, ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿ ಸಂಜೆ ವೇಳೆಗೆ ಸ್ವಪ್ರೇರಣೆಯಿಂದ ಕೆಲಸಕ್ಕೆ ಹಾಜರಾದರು. ಅಲ್ಲದೇ, ಡಿಪೊ ಹಾಗೂ ನಿಲ್ದಾಣಗಳ ಬಳಿ ಕಾರ್ಮಿಕ ಸಂಘಟನೆಗಳ ಪರ ಘೋಷಣೆ ಕೂಗಿ ಸಂಭ್ರಮಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.