ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ -ಲಕ್ಕೂರು ಕ್ಷೇತ್ರದ ಸದಸ್ಯ ಸ್ಥಾನಕ್ಕೆ ಫೆ.9ರಂದು ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜ.25ರಿಂದ ಚುನಾವಣಾ ನೀತಿಸಂಹಿತೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.11ಕ್ಕೆ ಉಪ ಚುನಾವಣೆ ಪ್ರಕ್ರಿಯೆ ಮುಗಿಯಲಿದ್ದು, ಆವರೆಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣಾ ನೀತಿಸಂಹಿತೆ ನಿಗಾ ವಹಿಸಲಾಗುತ್ತದೆ. ನೀತಿಸಂಹಿತೆ ಉಲ್ಲಂಘಿಸಿದರೆ ಶಿಸ್ತುಕ್ರಮ ಜರುಗಿಸುತ್ತೇವೆ. ಸಾರ್ವಜನಿಕರು, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಜ.25ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಜ.28 ಕೊನೆಯ ದಿನ. ಜ.25ರಂದು 4ನೇ ಶನಿವಾರವಾಗಿದ್ದು, ಆ ದಿನ ಸಹ ಚುನಾವಣಾಧಿಕಾರಿಯು ನಾಮಪತ್ರ ಸ್ವೀಕರಿಸುತ್ತಾರೆ. ಉಪ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರದಲ್ಲಿ ‘ನೋಟಾ’ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ತಂಡ ರಚನೆ: ಚುನಾವಣಾ ಅಕ್ರಮ ಹಾಗೂ ನೀತಿಸಂಹಿತೆ ಉಲ್ಲಂಘನೆ ತಡೆಗಾಗಿ ಮಾದರಿ ನೀತಿಸಂಹಿತೆ ತಂಡ ರಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಟಿ.ಪ್ರಕಾಶ್, ರಾಜಸ್ವ ನಿರೀಕ್ಷಕ ಎಸ್.ಜೆ.ಮಂಜುನಾಥ್, ಗ್ರಾಮ ಲೆಕ್ಕಿಗ ಪವನ್ಕುಮಾರ್ ಅವರು ನೀತಿಸಂಹಿತೆ ತಂಡದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಚುನಾವಣಾ ವೆಚ್ಚ ತಪಾಸಣೆಗೆ ಮಾಲೂರು ಪುರಸಭೆ ಲೆಕ್ಕಾಧಿಕಾರಿ ಎಂ.ಮಲ್ಲೇಶಯ್ಯ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಚುನಾವಣಾ ಅಕ್ರಮ ಹಾಗೂ ನೀತಿಸಂಹಿತೆ ಉಲ್ಲಂಘನೆ ಸಂಬಂಧ ಸಾರ್ವಜನಿಕರು 9741874871 ಅಥವಾ 9844720887 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.