ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಚನ್ನಕಲ್ ಗ್ರಾಮದಲ್ಲಿನ ಅಸ್ಪೃಶ್ಯತೆ ಆಚರಣೆ ನಿವಾರಣೆಗಾಗಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿಗೆ ಗ್ರಾಮದ ದಲಿತರ ಮನೆಗಳಲ್ಲಿ ಸೋಮವಾರ ಸಹಭೋಜನ ನಡೆಸಲಾಯಿತು.
‘ಪ್ರಜಾವಾಣಿ’ ಪತ್ರಿಕೆಯಲ್ಲಿ ಜ.20ರಂದು ಪ್ರಕಟವಾಗಿದ್ದ ವರದಿ ಆಧರಿಸಿ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಜನ ಸಂಪರ್ಕ ನಡೆಸಿ ಸವರ್ಣೀಯರು ಮತ್ತು ದಲಿತರ ನಡುವೆ ಸಾಮರಸ್ಯ ಮೂಡಿಸುವ ಪ್ರಯತ್ನ ಮಾಡಿದರು.
ಜತೆಗೆ ಗ್ರಾಮದ ಮಾರೆಮ್ಮ ದೇವಸ್ಥಾನ ಪ್ರವೇಶಕ್ಕೆ ದಲಿತರಿಗೆ ಅವಕಾಶ ಕಲ್ಪಿಸಿದರು. ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವ್ಕುಮಾರ್, ದಲಿತರ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಸೂಚನೆಯಂತೆ ಗ್ರಾಮಕ್ಕೆ ಭೇಟಿ ನೀಡಿ ಅಸ್ಪೃಶ್ಯತೆ ತೊಡೆದು ಹಾಕುವ ನಿಟ್ಟಿನಲ್ಲಿ ದಲಿತರು ಮತ್ತು ಸವರ್ಣೀಯರ ಮನಸ್ಸು ಬೆಸೆಯುವ ಕೆಲಸ ಮಾಡಲಾಗುತ್ತಿದೆ. ದಲಿತರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ದಲಿತರು ಮತ್ತು ಸವರ್ಣೀಯರ ನಡುವೆ ಪರಸ್ಪರ ಸಂವಹನದ ಕೊರತೆಯಿದೆ. ಇನ್ನು ಮುಂದೆ ಈ ರೀತಿಯ ಸಮಸ್ಯೆ ಆಗುವುದಿಲ್ಲ’ ಎಂದು ಸಂಜೀವ್ಕುಮಾರ್ ಹೇಳಿದರು.
ಶಾಸಕ ಕೆ.ವೈ.ನಂಜೇಗೌಡ, ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿ.ಪಂ ಸಿಇಒ ಜಿ.ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುರಾಜ್ ಜಿ.ಶಿರೋಳ್ ದಲಿತರ ಮನೆಯಲ್ಲಿ ಸಹಭೋಜನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.