
ಮಾಲೂರು: ವೈಕುಂಠ ಏಕಾದಾಶಿಗೆ ಕೋಲಾರ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳವಾದ ಚಿಕ್ಕಕತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ ಸಜ್ಜಾಗಿದೆ.
ಮಂಗಳವಾರ ವೈಕುಂಠ ಏಕಾದಶಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ.
ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲ್ ಹಾಗೂ ಸದಸ್ಯರು ಭಕ್ತರ ಸುಗಮ ದರ್ಶನಕ್ಕೆ ವ್ಯವಸ್ಥೆ ಹಾಗೂ ಮೂಲಸೌಕರ್ಯಗಳಿಗೆ ಸಕಲ ಸಿದ್ಧತೆ ಕೈಗೊಂಡಿದ್ದಾರೆ.
ವೈಕುಂಠ ಏಕಾದಶಿ ವೆಂಕಟೇಶ್ವರನಿಗೆ ಅತ್ಯಂತ ಪ್ರಿಯವಾದ ದಿನ. ಈ ದಿನ ವೆಂಕಟೇಶ್ವರನಿಗೆ ತಿರುಮಂಜನ, ವಜ್ರ ಹಾಗೂ ಚಿನ್ನಾಭರಣಗಳಿಂದ ಅಲಂಕಾರ ಮಾಡಲಾಗುತ್ತದೆ. ತೋಮಾಲ ಸೇವೆ, ಧರ್ನುಮಾಸ ಆರಾಧನೆ ಬಳಿಕ ಉತ್ಸವ ಮೂರ್ತಿಯ ಮೆರವಣಿಗೆ ನಡೆಯುತ್ತದೆ.
ವೈಕುಂಠ ಏಕಾದಶಿಯಂದು ವೈಕುಂಠ ದ್ವಾರದಲ್ಲಿ ಭಕ್ತರಿಗೆ ದರ್ಶನ ಪ್ರಾಪ್ತಿಯಾಗುತ್ತದೆ ಎಂಬ ಐತಿಹ್ಯವಿದೆ. ಹಾಗಾಗಿ ಉತ್ಸವದ ಬಳಿಕ ಮೂರ್ತಿಯನ್ನು ದೇವಾಲಯಕ್ಕೆ ಕರೆತಂದು ವೈಕುಂಠ ದ್ವಾರದಲ್ಲಿ ಪ್ರತಿಷ್ಠಾಪಿಸಿ ಭಕ್ತರಿಗೆ ದರ್ಶನ ನೀಡಲಾಗುತ್ತದೆ.
ವೈಕುಂಠ ಏಕಾದಶಿ ಅಂಗವಾಗಿ ಚಿಕ್ಕತಿರುಪತಿಯ ವೆಂಕಟರಮಣ ದೇವಾಲಯಕ್ಕೆ ಬರುವ ಭಕ್ತರಿಗೆ ಪೆಂಡಾಲ್ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆಆಲಾಂಬಾಡಿ ಎಂ.ಗೋಪಾಲ್ಅಧ್ಯಕ್ಷ ದೇವಸ್ಥಾನ ಸಮಿತಿ
ಅತಿ ಹೆಚ್ಚು ಆದಾಯಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಈ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಯುಗಾದಿ ಶ್ರಾವಣ ನವರಾತ್ರಿ ಮತ್ತು ವೈಕುಂಠ ಏಕಾದಶಿಯಂತಹ ವಿಶೇಷ ದಿನಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗುತ್ತಿದೆ. ಪ್ರಸನ್ನ ವೆಂಕಟರಮಣ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ನೆರವೇರುತ್ತದೆ. ಸಾವಿರಾರು ಭಕ್ತರು ಹರಕೆ ಸಲ್ಲಿಸುತ್ತಾರೆ. ದೇವಾಲಯದ ವಾರ್ಷಿಕ ಆದಾಯ ₹9 ಕೋಟಿ ದಾಟಿದ್ದು ಜಿಲ್ಲೆಯಲ್ಲಿ ಅತೀ ಹೆಚ್ಚು ಆದಾಯ ಹೊಂದಿರುವ ದೇವಾಲಯ ಎಂಬ ಹೆಗ್ಗಳಿಕೆ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.