
ಬಂಗಾರಪೇಟೆ: ನಗರದಲ್ಲಿ ಕಾರ್ಮಿಕಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಹೋಟೆಲ್, ಬೇಕರಿ, ಇಟ್ಟಿಗೆ ಕಾರ್ಖಾನೆ, ಕ್ವಾರಿ ಮುಂತಾದ ಕಡೆ ದಾಳಿ ನಡೆಸಿ ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಿ, ಕೆಜಿಎಫ್ ಬಾಲಕರ ಬಾಲಮಂದಿರಕ್ಕೆ ಬುಧವಾರ ದಾಖಲಿಸಿದ್ದಾರೆ.
ಸಿಡಿಪಿಒ ಮುನಿರಾಜು ಮಾತನಾಡಿ, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧ. ಈ ನಿಟ್ಟಿನಲ್ಲಿ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡ ಮಾಲೀಕರ ಮೇಲೆ ಬಾಲಕಾರ್ಮಿಕ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಬಡ ಪೋಷಕರು ಆರ್ಥಿಕ ಸಂಕಷ್ಟದಿಂದ ಮಕ್ಕಳನ್ನು ಶಾಲೆ ಬಿಡಿಸಿ ದುಡಿಮೆಗೆ ಕಳುಹಿಸುವ ಪರಿಪಾಠ ಹೆಚ್ಚುತ್ತಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಬದುಕು ಹಾಳಾಗುತ್ತಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಆಗಬೇಕು. ಸಮಾಜದಲ್ಲಿ ಎಲ್ಲಾದರೂ ಬಾಲ ಕಾರ್ಮಿಕರು ಕಂಡರೆ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿ ಚಂದನ, ರಮೇಶ್, ಶೃತಿ, ಅಭಿಜಿತ್ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.