ADVERTISEMENT

ಸಿ.ಎಂ ದ್ವೇಷ ರಾಜಕಾರಣ ಮಾಡುತ್ತಿಲ್ಲ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2020, 13:36 IST
Last Updated 15 ಫೆಬ್ರುವರಿ 2020, 13:36 IST

ಕೋಲಾರ: ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಒಂದು ವೇಳೆ ಮಾಡಿದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಬಹುಪಾಲು ಮುಖಂಡರು ಮನೆ ಬಿಟ್ಟು ಜೈಲು ಸೇರುತ್ತಾರೆ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿಗೆ ಹಾಗೂ ಯಡಿಯೂರಪ್ಪ ಅವರಿಗೆ ದ್ವೇಷದ ರಾಜಕಾರಣ ಮಾಡುವ ಅಗತ್ಯವಿಲ್ಲ. ಯಡಿಯೂರಪ್ಪ 4 ದಶಕದ ರಾಜಕಾರಣದಲ್ಲಿ ಎಲ್ಲಾ ಪಕ್ಷದವರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಿದ್ದಾರೆ’ ಎಂದರು.

‘ಸಚಿವ ಆನಂದ್‌ ಸಿಂಗ್ ಪ್ರಾಮಾಣಿಕರು. ಅವರು ಅರಣ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆ. ಅವರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಗಣಿ ಅಕ್ರಮ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಅಂತಿಮ ತೀರ್ಮಾನ ಆಗುವವರೆಗೂ ಆನಂದ್‌ ಸಿಂಗ್‌ ಅಪರಾಧಿಯಲ್ಲ. ರಾಜಕೀಯ ಹಾಗೂ ವೈಯಕ್ತಿಕ ಜೀವನ ಬೇರೆ ಬೇರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ನಾನು ಒಳ್ಳೆಯ ಸ್ನೇಹಿತರು’ ಎಂದು ಹೇಳಿದರು.

ADVERTISEMENT

‘ಫೆ.25ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಬಗ್ಗೆ ಮಾಹಿತಿಯಿಲ್ಲ. ನಾನು ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವುದು ಸಮಂಜಸವಲ್ಲ. ಯಡಿಯೂರಪ್ಪ ಸಮರ್ಥರಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಅವರೇ ತೀರ್ಮಾನ ಕೈಗೊಳ್ಳುತ್ತಾರೆ. ಮುಖ್ಯಮಂತ್ರಿಗಳು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.