ADVERTISEMENT

ಬಾಲ್ಯವಿವಾಹ ತಡೆ ಅಭಿಯಾನ ನಡೆಸಿ: ಜಿಲ್ಲಾಧಿಕಾರಿ ರವಿ

ಪ್ರಕರಣ ನಡೆದರೆ ಬಾಲ್ಯವಿವಾಹ ನಿಷೇಧಾಧಿಕಾರಿಗಳೇ ಜವಾಬ್ದಾರರು: ಜಿಲ್ಲಾಧಿಕಾರಿ ರವಿ

​ಪ್ರಜಾವಾಣಿ ವಾರ್ತೆ
Published 26 ಮೇ 2025, 15:58 IST
Last Updated 26 ಮೇ 2025, 15:58 IST
ಕೋಲಾರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಅಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಎಂ.ಆರ್‌.ರವಿ ಉದ್ಘಾಟಿಸಿದರು. ಜಿ.ಪಂ ಸಿಇಒ ಪ್ರವೀಣ್‌ ಪಿ.ಬಾಗೇವಾಡಿ, ಎಸ್‌ಪಿ ನಿಖಿಲ್‌ ಬಿ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ವಿ. ಪಾಲ್ಗೊಂಡಿದ್ದರು
ಕೋಲಾರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಅಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಎಂ.ಆರ್‌.ರವಿ ಉದ್ಘಾಟಿಸಿದರು. ಜಿ.ಪಂ ಸಿಇಒ ಪ್ರವೀಣ್‌ ಪಿ.ಬಾಗೇವಾಡಿ, ಎಸ್‌ಪಿ ನಿಖಿಲ್‌ ಬಿ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ವಿ. ಪಾಲ್ಗೊಂಡಿದ್ದರು    

ಕೋಲಾರ: ‘ಬಾಲ್ಯವಿವಾಹ ನಾಗರಿಕ ಸಮಾಜಕ್ಕೆ ದೊಡ್ಡ ಸವಾಲಾಗಿದ್ದು, ಅದನ್ನು ತಡೆಯಬೇಕು. ಕೋಲಾರವನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಭಿಯಾನ, ಚಳವಳಿ ರೀತಿ ಕೆಲಸ ನಡೆಯಬೇಕು. ತಮ್ಮ ವ್ಯಾಪ್ತಿಯಲ್ಲಿ ಪ್ರಕರಣ ನಡೆದರೆ ಬಾಲ್ಯವಿವಾಹ ನಿಷೇಧಾಧಿಕಾರಿಗಳೇ ಜವಾಬ್ದಾರರು’ ಎಂದು ಜಿಲ್ಲಾಧಿಕಾರಿ ಎಂ.ಆರ್‌.ರವಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲ್ಯವಿವಾಹ ನಿಷೇಧಾಧಿಕಾರಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ವಿವಿಧ ಇಲಾಖೆಗಳ ಅಧಿಕಾರಿಗಳು ತಾವು ಇರುವಂತಹ ಸ್ಥಾನಮಾನವನ್ನು ಪಕ್ಕಕ್ಕಿಟ್ಟು ಬಾಲ್ಯವಿವಾಹ ನಿಷೇಧ ಅಧಿಕಾರಿಯಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಈಗ ನಡೆಯುತ್ತಿರುವ ಪ್ರಯತ್ನ ಸಾಕಾಗುತ್ತಿಲ್ಲ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರನ್ನು ಬಾಲ್ಯವಿವಾಹ ನಿಷೇಧ ಅಧಿಕಾರಿಯನ್ನಾಗಿ ಮಾಡಿದೆ’ ಎಂದರು.

ADVERTISEMENT

‘ಯಾವುದೇ ಹೆಣ್ಣು ಮಗು ನಿರಂತರವಾಗಿ ಶಾಲೆಗೆ ಬಾರದೆ ಇರುವ ಸಂದರ್ಭದಲ್ಲಿ ಶಿಕ್ಷಕರು ಅವರ ಪೋಷಕರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ತಾವು ಅವರ ಮನೆಗೆ ಹೋಗಿ ಅಲ್ಲೇನಾದರೂ ಬಾಲ್ಯವಿವಾಹ ಆಗಿದೆಯೇ ಎಂಬುದನ್ನು ಪರಿಶೀಲಿಸಿ ದೂರು ದಾಖಲು ಮಾಡಬೇಕಾಗುತ್ತದೆ’ ಎಂದು ಹೇಳಿದರು.

‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಳೀಯ ಎಲ್ಲಾ ಅಧಿಕಾರಿಗಳು ಸೇರಿ ಬಾಲ್ಯವಿವಾಹಗಳನ್ನು ತಡೆಯಬೇಕು. ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾಡಳಿತದಿಂದ ಪುರಸ್ಕಾರ ನೀಡಲಾಗುವುದು’ ಎಂದು ಘೋಷಿಸಿದರು.

‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು, ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್‌, ಮೇಲ್ವಿಚಾರಿಕಿಯರು, ಶಾಲೆಯ ಮುಖ್ಯ ಶಿಕ್ಷಕರು, ಆರೋಗ್ಯ ನಿರೀಕ್ಷಕರು, ಎಲ್ಲಾ ಕಂದಾಯ ಅಧಿಕಾರಿಗಳು ಬಾಲ್ಯವಿವಾಹ ನಿಷೇಧ ಅಧಿಕಾರಿ ಆಗಿರುತ್ತಾರೆ’ ಎಂದರು.

‘ಬಾಲ್ಯವಿವಾಹ ಮಾಡುವವರಿಗೆ ಮತ್ತು ಮಾಡಿಕೊಳ್ಳುವವರು ಮಾತ್ರ ಶಿಕ್ಷೆಗೆ ಒಳಗಾಗುವುದಿಲ್ಲ; ಅಂತಹ ಮದುವೆಯಲ್ಲಿ ಪಾಲ್ಗೊಂಡರೆ ಅಥವಾ ಪ್ರೋತ್ಸಾಹ ನೀಡಿದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ನಿಶ್ಚಿತಾರ್ಥ ಕೂಡ ಕಾನೂನು ಉಲ್ಲಂಘನೆ ಆಗುತ್ತದೆ. ಬಾಲ್ಯಗರ್ಭಿಣಿ ವಿಚಾರ ಕೂಡ ದೊಡ್ಡ ಸಮಸ್ಯೆ ಆಗಿ ಪರಿಣಮಿಸಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಪಿ.ಬಾಗೇವಾಡಿ ಮಾತನಾಡಿ, ‘ಸಮಾಜದಲ್ಲಿ ಮಹಿಳೆಯರನ್ನು ಸಮಾನರಾಗಿ ಕಾಣದೆ ಇರುವುದು, ಹೆಣ್ಣು ಮಕ್ಕಳು ಭ್ರೂಣಹತ್ಯೆ ಮಾಡುವುದು, ಹೆಣ್ಣು ಮಕ್ಕಳು ಕುಟುಂಬಕ್ಕೆ ಹೊರೆಯಾಗುತ್ತಾರೆ ಎಂದು ಬೇಗ ಮದುವೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ನಿರಂತರವಾಗಿ ಅರಿವು ಮೂಡಿಸಬೇಕು, ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಬಾಲ್ಯ ವಿವಾಹ ತಡೆಯಬೇಕು. ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ‘ಪೋಕ್ಸೋ, ಬಾಲ್ಯವಿವಾಹ ಕುರಿತು ಶಾಲಾ ಕಾಲೇಜುಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯಿಂದ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಅರಿವು ಕಾರ್ಯಕ್ರಮ ಮಾಡುತ್ತಿದ್ದು, ಪ್ರತಿವರ್ಷ ಬಾಲ್ಯವಿವಾಹ ಪ್ರಕರಣಗಳು ಕಡಿಮೆಯಾಗುತ್ತಿವೆ’ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ ಎಸ್.ಹೊಸಮನಿ, ‘ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ, ಗ್ರಾಮ ಪಂಚಾಯಿತಿಗಳ ಕಸ ವಿಲೇವಾರಿ ವಾಹನಗಳ ಮೂಲಕ ಪ್ರತಿಯೊಂದು ಹಳ್ಳಿಯ ಮನೆಗಳಲ್ಲಿರುವ ಪೋಷಕರಿಗೆ ಬಾಲ್ಯವಿವಾಹ ಕುರಿತು ಅರಿವು ಮೂಡಿಸಬೇಕು. ಏನಾದರೂ ಬಾಲ್ಯ ವಿವಾಹ ಮಾಡುವುದು, ಮಾಡಿಸುವುದು ಅಂತಹ ಮದುವೆಗಳಲ್ಲಿ ಪಾಲ್ಗೊಳ್ಳುವುದು ಮಾಡಿದರೆ ಅಂತಹವರ ವಿರುದ್ಧ ದೂರು ದಾಖಲಿಸಲಾಗುತ್ತದೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ 2024–25ನೇ ಸಾಲಿನಲ್ಲಿ 72 ಬಾಲ್ಯವಿವಾಹ ತಡೆಯಲಾಗಿದೆ. ಇನ್ನು 13 ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ವಿ, ಎಲ್ಲಾ ತಹಶೀಲ್ದಾರರು, ಬಾಲ್ಯ ವಿವಾಹ ನಿಷೇಧಾಧಿಕಾರಿಗಳು, ಪೊಲೀಸರು, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.