ಕೋಲಾರ: ‘ಮಕ್ಕಳ ಹಕ್ಕುಗಳ ಜಾರಿಗೆ ಗ್ರಾಮಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಬೇಕು. ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಹಕ್ಕು ಎತ್ತಿ ಹಿಡಿಯುವಲ್ಲಿ ಮಕ್ಕಳ ಗ್ರಾಮಸಭೆಗಳು ನಿರ್ಣಾಯಕ ಪಾತ್ರ ವಹಿಸುತ್ತವೆ’ ಎಂದು ತಾಲ್ಲೂಕಿನ ಅರಹಳ್ಳಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೆ.ಶಿವಾನಂದಕುಮಾರ್ ಅಭಿಪ್ರಾಯಪಟ್ಟರು.
ಅರಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋಡಿಕಣ್ಣೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಮಾತನಾಡಿ, ‘ಮಕ್ಕಳ ಗ್ರಾಮಸಭೆಯು ಮಕ್ಕಳ ಸಮಸ್ಯೆಗಳನ್ನು ನೇರವಾಗಿ ಗ್ರಾ.ಪಂ ಜತೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಲು ಹಾಗೂ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸೂಕ್ತ ವೇದಿಕೆಯಾಗಿದೆ’ ಎಂದು ತಿಳಿಸಿದರು.
‘ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಿ ಮೂಲಸೌಕರ್ಯ ಒದಗಿಸಬೇಕು. ಮಕ್ಕಳ ಹಕ್ಕುಗಳ ಬಗ್ಗೆ ಅವರಿಗೆ ಜಾಗೃತಿ ಮೂಡಿಸಬೇಕು. ಮಕ್ಕಳಿಗೆ ದೊರಕುವ ಸೌಲಭ್ಯಗಳ ಕುರಿತು ಗ್ರಾ.ಪಂ ಮಟ್ಟದಲ್ಲಿ ನಡಾವಳಿ ರಚಿಸಿ ಸರ್ಕಾರದ ಗಮನಕ್ಕೆ ತಂದು ಅನುಷ್ಠಾನಗೊಳಿಸಬೇಕು’ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಂಜುನಾಥ್ ಅವರು ಮಕ್ಕಳ ಬದುಕುವ ಹಕ್ಕು, ರಕ್ಷಣೆ ಹಕ್ಕು, ವಿಕಾಸ ಹೊಂದುವ ಹಕ್ಕು ಹಾಗೂ ಭಾಗವಹಿಸುವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾ.ಪಂ ಆಡಳಿತಾಧಿಕಾರಿ ಡಿ.ಪರಮೇಶ್, ಕಾರ್ಯದರ್ಶಿ ಎಸ್.ನಾಗರಾಜ್, ಕಿರಿಯ ಆರೋಗ್ಯ ಸಹಾಯಕಿ ವರಲಕ್ಷ್ಮೀ ಪಾಲ್ಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.