ಕೋಲಾರ: ‘ಇಟಲಿಯಿಂದ ಬಂದವರಿಗೆ ಪೌರತ್ವ ಕೊಟ್ಟಿರುವ ದೇಶದಲ್ಲಿ ಬೇರೆಯವರಿಗೆ ಪೌರತ್ವ ಕೊಡಬಾರದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಹಾತ್ಮ ಗಾಂಧೀಜಿ ಆಸೆಯಂತೆ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. ಆದರೆ, ಕಾಂಗ್ರೆಸ್ ಪಕ್ಷವು ಕಾಯ್ದೆ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ. ಕಾಂಗ್ರೆಸ್ ಮುಖಂಡರು ಓಟ್ ಬ್ಯಾಂಕ್ಗಾಗಿ ಪೌರತ್ವ ಕಾಯ್ದೆ ವಿರೋಧಿಸುತ್ತಿದ್ದಾರೆ’ ಎಂದು ಟೀಕಿಸಿದರು.
‘ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯಕ್ಕೆ ಮಹತ್ವವಿದೆ. ಪೌರತ್ವ ಇಲ್ಲದವರಿಗೆ ಕೊಡಲಾಗುವುದು. ಇರುವವರ ಬಳಿ ಕಿತ್ತುಕೊಳ್ಳುವುದಿಲ್ಲ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಶಕ್ತಿ ಬಲವಾಗಿದೆ. ಸಿಎಎ ವಿರೋಧಿಸುವ ಸ್ವಾತಂತ್ರ್ಯ ಹೋರಾಟಗಾರರು, ಚಿಂತಕರು, ಸಾಹಿತಿಗಳ ಬಗ್ಗೆ ಮಾತನಾಡುವುದಿಲ್ಲ. ಸುಳ್ಳು ಹೇಳುವವರು ಮತ್ತು ಅಪಪ್ರಚಾರ ಮಾಡುವವರು ರಾಷ್ಟ್ರದ್ರೋಹಿಗಳು’ ಎಂದು ಗುಡುಗಿದರು.
‘ಕಾಂಗ್ರೆಸ್ ಪಕ್ಷವು ದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಕಾಂಗ್ರೆಸ್ನ ಕುತಂತ್ರ ಅಲ್ಪಸಂಖ್ಯಾತರಿಗೆ ಅರ್ಥವಾಗಿದೆ. ಸಿಎಎ ವಿಚಾರದಲ್ಲಿ ಅಪಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ರಾಷ್ಟ್ರ ವಿರೋಧಿಯಾಗಿದೆ’ ಎಂದು ಕಿಡಿಕಾರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.