ADVERTISEMENT

ನಾನು ಯಾವತ್ತೂ ಜೆಡಿಎಸ್‌ನವರ ಮನೆ ಬಾಗಿಲಿಗೆ ಹೋಗಿಲ್ಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 13:55 IST
Last Updated 12 ಡಿಸೆಂಬರ್ 2021, 13:55 IST
ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ   

ಕೋಲಾರ: ‘ನಾನು ಯಾವತ್ತೂ ಜೆಡಿಎಸ್‌ನವರ ಮನೆ ಬಾಗಿಲಿಗೆ ಹೋಗಿ ನಮ್ಮ ಪಕ್ಷದ ಜತೆ ಸೇರಿ ಸರ್ಕಾರ ರಚಿಸಿ ಎಂದು ಕೇಳಿಲ್ಲ. ಆಗ ವರಿಷ್ಠರ ಮಟ್ಟದಲ್ಲಿ ಮಾತುಕತೆ ಆಗಿದ್ದು ನಿಜ. ಆದರೆ, ನಾನಂತೂ ಅವರ ಮನೆಗೆ ಹೋಗಿಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಜೆಡಿಎಸ್‌ ಪಕ್ಷವನ್ನು ಬಿಜೆಪಿ ಬಿ ಟೀಂ ಎಂದರೆ ಜೆಡಿಎಸ್‌ನವರು ಯಾಕೆ ಪ್ರತಿಕ್ರಿಯಿಸಬೇಕು? ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು?’ ಎಂದು ಕುಟುಕಿದರು.

‘ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ನವರು 6 ಕಡೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಹಾಕಿ 19 ಕಡೆ ಏಕೆ ಹಾಕಲಿಲ್ಲ. ಉಳಿದ ಕಡೆ ಜೆಡಿಎಸ್‌ನವರು ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಿಸಿದ್ದಾರೆ. ಜೆಡಿಎಸ್‌ ಯಾವಾಗಲೂ ಬಿಜೆಪಿಯ ಬಿ ಟೀಂ ಅಷ್ಟೇ’ ಎಂದು ಟೀಕಿಸಿದರು.

ADVERTISEMENT

‘ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜೆಡಿಎಸ್‌ನವರು ಏಕೆ ವಿರೋಧಿಸಿಲ್ಲ. ಈ ವಿಚಾರದಲ್ಲಿ ಜೆಡಿಎಸ್‌ನವರು ಯಾರ ಪರವಿದ್ದರು? ಕೋವಿಡ್‌ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಹೀಗಾಗಿ ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಂ ಅಂತ ಹೇಳಿದ್ದೇನೆ’ ಎಂದರು.

‘ವಿಧಾನ ಪರಿಷತ್‌ ಚುನಾವಣೆಯಲ್ಲಿ ಕೋಲಾರ ಸೇರಿದಂತೆ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುತ್ತಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೇರೆ ಬೇರೆ ಕಡೆ ಸ್ಪರ್ಧೆಗೆ ನನ್ನನ್ನು ಕರೆಯುತ್ತಿದ್ದಾರೆ. ಈ ಬಗ್ಗೆ ಮುಂದೆ ನೋಡೋಣ ಎಂದು ಹೇಳಿದ್ದೇನೆ. ಹೈಕಮಾಂಡ್ ತೀರ್ಮಾನದಂತೆ ಸ್ಪರ್ಧೆ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.