ADVERTISEMENT

ರೆಸಾರ್ಟ್‌ ರಾಜಕಾರಣ: ಬಡಿದಾಟಕ್ಕೆ ಕಾಂಗ್ರೆಸ್‌ ಮುಖಂಡರೇ ಹೊಣೆ– ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 25 ಜನವರಿ 2019, 12:35 IST
Last Updated 25 ಜನವರಿ 2019, 12:35 IST
   

ಕೋಲಾರ: ‘ಕಾಂಗ್ರೆಸ್‌ ಶಾಸಕರ ಜಟಾಪಟಿಗೂ ಬಿಜೆಪಿಗೂ ಸಂಬಂಧವಿಲ್ಲ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬಡಿದಾಟಕ್ಕೆ ಆ ಪಕ್ಷದ ಮುಖಂಡರೇ ಹೊಣೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ವಿವಿಧೆಡೆ ಶುಕ್ರವಾರ ಬರ ಪರಿಸ್ಥಿತಿ ಅವಲೋಕಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಪಕ್ಷದ 104 ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರು ಒಟ್ಟಿಗಿದ್ದೇವೆ. ರೆಸಾರ್ಟ್‌ ರಾಜಕಾರಣ ಮಾಡುವ ಅಗತ್ಯವಿಲ್ಲ. ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾದು ನೋಡೋಣ. ಪ್ರಬಲ ವಿರೋಧ ಪಕ್ಷವಾಗಿ ಕರ್ತವ್ಯ ನಿಭಾಯಿಸುತ್ತೇವೆ’ ಎಂದರು.

‘ರಾಜ್ಯದಲ್ಲಿ ಭೀಕರ ಬರಗಾಲವಿದೆ. ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಆದ್ಯತೆ ಕೊಡುತ್ತಿಲ್ಲ. ಯಾವುದೇ ಜಿಲ್ಲೆಗೆ ಹಣ ಬಿಡುಗಡೆ ಮಾಡಿಲ್ಲ. ಕುಡಿಯುವ ನೀರಿನ ಸೌಕರ್ಯಕ್ಕೆ ಪ್ರತಿ ಜಿಲ್ಲೆಗೆ ₹ 50 ಲಕ್ಷ ಕೊಟ್ಟಿರುವುದು ಬಿಟ್ಟರೆ ಏನನ್ನೂ ಮಾಡಿಲ್ಲ. ಬರ ಪರಿಹಾರ ಕಾಮಗಾರಿಗಳಿಗೆ ಕೇಂದ್ರ ಕೊಟ್ಟಿರುವ ಅನುದಾನದ ಜತೆಗೆ ರಾಜ್ಯ ಸರ್ಕಾರವು ಹಣ ಕೊಡಲಿ’ ಎಂದು ಒತ್ತಾಯಿಸಿದರು.

ADVERTISEMENT

‘ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಜೆಡಿಎಸ್‌– ಕಾಂಗ್ರೆಸ್‌ ಪಕ್ಷಗಳು ಗೊಂದಲದ ಗೂಡಾಗಿವೆ. ಬರಪೀಡಿತ ಪ್ರದೇಶಗಳಲ್ಲಿ ಸಚಿವರು ಪ್ರವಾಸ ಮಾಡದ ಕಾರಣ ಪರಿಹಾರ ಕಾರ್ಯ ವಿಳಂಬವಾಗಿದೆ. ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್‌ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ. ಅವರು ಉಪದೇಶ ಬಿಟ್ಟು ಬರಪೀಡಿತ ಪ್ರದೇಶಗಳಿಗೆ ಸರ್ಕಾರದಿಂದ ಅನುದಾನ ಕೊಡಿಸಲಿ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.