ADVERTISEMENT

20ಕ್ಕೆ ಕಾಂಗ್ರೆಸ್‌ ರಾಜಭವನ ಚಲೋ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 15:22 IST
Last Updated 17 ಜನವರಿ 2021, 15:22 IST
ರಾಜಭವನ ಚಲೋ ಸಂಬಂಧ ಕೋಲಾರದಲ್ಲಿ ಶನಿವಾರ ಕಾಂಗ್ರೆಸ್‌ ಮುಖಂಡರ ಸಭೆ ನಡೆಯಿತು.
ರಾಜಭವನ ಚಲೋ ಸಂಬಂಧ ಕೋಲಾರದಲ್ಲಿ ಶನಿವಾರ ಕಾಂಗ್ರೆಸ್‌ ಮುಖಂಡರ ಸಭೆ ನಡೆಯಿತು.   

ಕೋಲಾರ: ‘ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಪಕ್ಷದ ಸೂಚನೆಯಂತೆ ಜ.20ರಂದು ಹಮ್ಮಿಕೊಂಡಿರುವ ರಾಜಭವನ ಚಲೋ ಹೋರಾಟದಲ್ಲಿ ಜಿಲ್ಲೆಯಿಂದ ಪಕ್ಷದ 10 ಸಾವಿರ ಕಾರ್ಯಕರ್ತರು ಭಾಗವಹಿಸುತ್ತಾರೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಾರೆಡ್ಡಿ ಹೇಳಿದರು.

ರಾಜಭವನ ಚಲೋ ಸಂಬಂಧ ಇಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿ, ‘ಮಾನವೀಯತೆ ಇಲ್ಲದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದೆ ಹಟ ಸಾಧಿಸುತ್ತಿದೆ. ಕೇಂದ್ರದ ಈ ನಡೆಗೆ ಸುಪ್ರೀಂ ಕೋರ್ಟ್ ಸಹ ಛೀಮಾರಿ ಹಾಕಿದೆ’ ಎಂದು ಟೀಕಿಸಿದರು.

‘ಮೋದಿಯವರು ಅಂಬಾನಿಯಂತಹ ಉದ್ಯಮಿಗಳಿಗೆ ದೇಶ ಅಡವಿಡಲು ಹೊರಟಿದ್ದಾರೆ. ತೈಲೋತ್ಪನ್ನಗಳ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಕೇಂದ್ರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್‌ ಪಕ್ಷವು ರಾಜಭವನ ಚಲೋ ಹಮ್ಮಿಕೊಂಡಿದೆ’ ಎಂದು ವಿವರಿಸಿದರು.

ADVERTISEMENT

‘ರಾಜಭವನ ಚಲೋ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಿದ್ದು, ಕಾಂಗ್ರೆಸ್ ಶಾಸಕರು ತಮ್ಮ ತಾಲ್ಲೂಕಿನಿಂದ ಕಾರ್ಯಕರ್ತರನ್ನು ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಕೋಲಾರ ತಾಲ್ಲೂಕಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಕಿಸಾನ್ ಖೇತ್ ಘಟಕದ ಅಧ್ಯಕ್ಷರಿಗೆ ಜವಾಬ್ದಾರಿ ನೀಡಲಾಗಿದೆ’ ಎಂದು ತಿಳಿಸಿದರು.

ರಾಜಭವನಕ್ಕೆ ಮುತ್ತಿಗೆ

‘ಪ್ರತಿ ತಾಲ್ಲೂಕಿನಿಂದ 20 ಬಸ್‌, 50 ಟ್ರ್ಯಾಕ್ಟರ್‌ ಹಾಗೂ ಇತರೆ ವಾಹನಗಳಲ್ಲಿ ಬರುವ ಕಾರ್ಯಕರ್ತರು ಜ.20ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಗಡಿ ಭಾಗದ ರಾಮಸಂದ್ರ ಬಳಿ ಜಮಾವಣೆಗೊಳ್ಳುತ್ತಾರೆ. ಬಳಿಕ ಬೆಂಗಳೂರಿಗೆ ತೆರಳುವ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕುತ್ತಾರೆ’ ಎಂದು ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ಮಾಹಿತಿ ನೀಡಿದರು.

ಕಾಂಗ್ರೆಸ್‌ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ್, ನಗರಸಭೆ ಸದಸ್ಯ ಪ್ರಸಾದ್‌ಬಾಬು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.