ಕೋಲಾರ: ‘ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದ್ದು, ಬಡವರು ಹಾಗೂ ನಿರ್ಗತಿಕರಿಗೆ ದಿಕ್ಕು ತೋಚದಂತಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಅಭಿಪ್ರಾಯಪಟ್ಟರು.
ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಾಗೂ ಸಾರ್ವಜನಿಕರ ಜೀವ ರಕ್ಷಣೆಗೆ ಪಂಚಾಯಿತಿ ಆಡಳಿತ ವ್ಯವಸ್ಥೆ ಮುಂದುವರಿಸಬೇಕು’ ಎಂದು ಸಲಹೆ ನೀಡಿದರು.
‘ಕೋವಿಡ್ ಸಂಬಂಧ ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜನರಿಗೆ ಅರಿವು ಮೂಡಿಸಲು ಜಾಗೃತಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಸದಸ್ಯರು ಗ್ರಾಮಗಳಲ್ಲಿ ಜ್ವರ, ನೆಗಡಿ, ಕೆಮ್ಮಿನ ಲಕ್ಷಣವಿರುವ ರೋಗಿಗಳನ್ನು ಕೂಡಲೇ ಪತ್ತೆ ಹಚ್ಚುತ್ತಾರೆ. ಜತೆಗೆ ಕೋವಿಡ್ ಪರೀಕ್ಷೆಗೂ ಕಾಯದೆ ರೋಗಿಗಳಿಗೆ ಅಗತ್ಯ ಔಷಧ ಮಾತ್ರೆ ವಿತರಿಸುತ್ತಾರೆ’ ಎಂದು ಮಾಹಿತಿ ನೀಡಿದರು.
‘ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಕ್ರಮ ವಹಿಸುವುದು ಮತ್ತು ಸೋಂಕಿತರ ಆರೋಗ್ಯದ ಬಗ್ಗೆ ಪರಿಶೀಲಿಸಿ ಧೈರ್ಯ ತುಂಬುವುದು ಜಾಗೃತಿ ಸಮಿತಿ ಸದಸ್ಯರ ಜವಾಬ್ದಾರಿ. ಈ ಸಮಿತಿ ಸದಸ್ಯರಿಂದ ಪ್ರತಿನಿತ್ಯ ವರದಿ ಪಡೆಯುತ್ತೇವೆ. ಜತೆಗೆ ಮಾತ್ರೆಗಳ ಸರಬರಾಜಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತೇವೆ. ಇದರಿಂದ ಪ್ರಾಥಮಿಕ ಹಂತದಲ್ಲೇ ಕೊರೊನಾ ಸೋಂಕಿನಿಂದ ಜನರನ್ನು ಕಾಪಾಡಬಹುದು’ ಎಂದರು.
‘ತಾಲ್ಲೂಕಿನ ವೇಮಗಲ್ ಪಟ್ಟಣ ಪಂಚಾಯಿತಿ, ಶೆಟ್ಟಹಳ್ಳಿ, ಕುರುಗಲ್ ಮತ್ತು ಚೌಡದೇನಹಳ್ಳಿ ಗ್ರಾ.ಪಂಗಳ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರವಾಗಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.