ಮುಳಬಾಗಿಲು: ‘ಕಾಂಗ್ರೆಸ್ ದೇಶವನ್ನು ಕಟ್ಟಿದ ಪಕ್ಷ. ಅಂತಹ ಪಕ್ಷದ ರಾಹುಲ್ ಗಾಂಧಿ ಅವರು ದೇಶದ ಏಕತೆಗಾಗಿ ಕನ್ಯಾಕುಮಾರಿಯಿಂದ ಜಮ್ಮು-ಕಾಶ್ಮೀರದವರೆಗೂ ಜನರಿಗೆ ಏಕತೆಯ ಅರಿವು ಮೂಡಿಸಲು ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಅವರ ಈ ಕಾರ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು’ ಎಂದು ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ತಿಳಿಸಿದರು.
ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಭಾರತ್ ಜೋಡೋ ಯಾತ್ರೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್ ತನ್ನದೇ ಆದ ಕೊಡುಗೆ ನೀಡಿದೆ. ಇಂತಹ ಪಕ್ಷದಿಂದ ಪ್ರಧಾನಿಯಾದ ದಿವಂಗತ ರಾಜೀವ್ ಗಾಂಧಿ ಅವರ ಐತಿಹಾಸಿಕ ಹೆಜ್ಜೆಗಳ ಹಾದಿಯಲ್ಲಿಯೇ ರಾಹುಲ್ ಗಾಂಧಿ ನಡೆಯುತ್ತಿದ್ದಾರೆ ಎಂದರು.
ಅ. 9ರಂದು ಕರ್ನಾಟಕಕ್ಕೆ ರಾಹುಲ್ ಗಾಂಧಿ ಅವರ ಪಾದಯಾತ್ರೆ ಬರಲಿದೆ. ಅಂದು ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, 2014ರಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಷಡ್ಯಂತ್ರ ರೂಪಿಸಿ ಜನರಿಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಧರ್ಮಗಳ ನಡುವೆ ಕೋಮುದ್ವೇಷ ಮೂಡಿಸುವ ಕೆಲಸದಲ್ಲಿ ತೊಡಗಿದೆ ಎಂದರು.
ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಯಕತ್ವದಡಿ ರಾಜ್ಯದಲ್ಲಿ ಪಕ್ಷ ಮುನ್ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಸಿ. ನೀಲಕಂಠೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್. ರಾಜೇಂದ್ರಗೌಡ, ಮುಖಂಡ ಉತ್ತನೂರು ಶ್ರೀನಿವಾಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರತ್ನಮ್ಮ, ಸಮಾಜ ಸೇವಕ ಸಿದ್ದನಹಳ್ಳಿ ವಿ. ಶೇಖರ್, ನಗರಸಭೆ ಮಾಜಿ ಅಧ್ಯಕ್ಷ ಎಂ.ಆರ್. ಮುರಳಿ, ರೋಷನ್ ಜಮೀರ್ ಖಾನ್(ಆಲ್ಲು), ನಗರಸಭೆ ಸದಸ್ಯ ಮೊಹಮ್ಮದ್ ಜಬೀ ಉಲ್ಲಾ, ಅಮಾನ್ ಉಲ್ಲಾ, ಅಕ್ಮಲ್ ಬೇಗ್, ವಾಜಿದ್, ಗರಡಿ ಶಂಕರಪ್ಪ, ಮುನಿಆಂಜನಪ್ಪ, ಶ್ರೀನಿವಾಸ್, ಕಾರ್ ಶ್ರೀನಿವಾಸ್, ಚನ್ನಾಪುರ ವೆಂಕಟೇಶ್ ಗೌಡ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.