ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದೆ.
ಇದರ ಬೆನ್ನಲ್ಲೇ ಹೊಸದಾಗಿ 15 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 656ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.
ಕೆಜಿಎಫ್ ತಾಲ್ಲೂಕಿನಲ್ಲಿ ಅತಿ ಹೆಚ್ಚು 6 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಪುರ ತಾಲ್ಲೂಕಿನ ತಲಾ ಇಬ್ಬರಿಗೆ ಹಾಗೂ ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 4 ಮತ್ತು ಮಾಲೂರು ತಾಲ್ಲೂಕಿನ 16 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.