ADVERTISEMENT

ಕೊರೊನಾ ಉಲ್ಬಣ: ಮೈ ಮರೆಯಬೇಡಿ ಎಂದ ವಿ.ಆರ್.ಸುದರ್ಶನ್

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 15:56 IST
Last Updated 12 ಮಾರ್ಚ್ 2021, 15:56 IST
ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕೋಲಾರ ತಾಲ್ಲೂಕಿನ ವೇಮಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಕೋವಿಡ್‌ ಲಸಿಕೆ ಪಡೆದರು.
ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕೋಲಾರ ತಾಲ್ಲೂಕಿನ ವೇಮಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಕೋವಿಡ್‌ ಲಸಿಕೆ ಪಡೆದರು.   

ಕೋಲಾರ: ‘ಕೋವಿಡ್ ಲಸಿಕೆ ಪಡೆದರೂ ಮಾಸ್ಕ್ ಧರಿಸುವುದು ಮತ್ತು ಅಂತರ ಕಾಪಾಡುವುದು ಅತ್ಯಗತ್ಯ’ ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕಿವಿಮಾತು ಹೇಳಿದರು.

ತಾಲ್ಲೂಕಿನ ವೇಮಗಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಕೋವಿಡ್ ಲಸಿಕೆ ಪಡೆದ ನಂತರ ಮಾತನಾಡಿ, ‘ಕೋವಿಡ್‌ನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಈ ನಡುವೆ ಸೋಂಕು ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಡುವ ಸಂದರ್ಭದಲ್ಲೇ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಮಾಣ ಉಲ್ಬಣಿಸುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ರಾಜ್ಯದಲ್ಲೂ ಮೂರ್ನಾಲ್ಕು ದಿನಗಳಿಂದ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಜನ ಮೈ ಮರೆಯಬಾರದು. ಸಾರ್ವಜನಿಕರು ಕೋವಿಡ್ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಮನೆಯಿಂದ ಹೊರ ಹೋಗುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ತಮಗೆ ಕೋವಿಡ್ ಬರುವುದಿಲ್ಲ ಎಂಬ ಉದಾಸೀನತೆ ಬೇಡ. ಈ ಸೋಂಕು ಸಂಪೂರ್ಣ ನಾಶವಾಗುವವರೆಗೂ ಎಚ್ಚರಿಕೆ ವಹಿಸಬೇಕು. ಜನ ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಒಂದೆಡೆ ಸೇರಬಾರದು. ಸಭೆ, ಸಮಾರಂಭಗಳಲ್ಲಿ ಜನರ ಗುಂಪುಗೂಡುವಿಕೆ ತಡೆಯಬೇಕು. ಸರ್ಕಾರ ಉಚಿತವಾಗಿ ಲಸಿಕೆ ನೀಡುತ್ತಿರುವುದು ಸ್ವಾಗತಾರ್ಹ’ ಎಂದರು.

ವೈದ್ಯ ಡಾ.ರವಿಕಿರಣ್, ಆಸ್ಪತ್ರೆ ಸಿಬ್ಬಂದಿ ಸುಮಲತಾ, ವೆಂಕಟಾಚಲಪತಿ, ಅಮೃತಾ, ಆಶಾ, ಪ್ರಿಯಾಂಕಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.