ADVERTISEMENT

ಹೊಸದಾಗಿ 5 ಪ್ರಕರಣ ಪತ್ತೆ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆ

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 14:39 IST
Last Updated 21 ಮಾರ್ಚ್ 2020, 14:39 IST
ಸಚಿವ ಡಾ. ಕೆ. ಸುಧಾಕರ್
ಸಚಿವ ಡಾ. ಕೆ. ಸುಧಾಕರ್   

ಕೋಲಾರ: ‘ರಾಜ್ಯದಲ್ಲಿ ಶನಿವಾರ ಒಂದೇ ದಿನ 5 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಕೋವಿಡ್‌–19 ಕುರಿತು ಇಲ್ಲಿ ಶನಿವಾರ ನಡೆದ ಜಾಗೃತಿ ಸಭೆಯಲ್ಲಿ ಮಾತನಾಡಿ, ‘ಶನಿವಾರ ಹೊಸದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ 1, ಮೈಸೂರಿನಲ್ಲಿ 1 ಹಾಗೂ ಬೆಂಗಳೂರಿನಲ್ಲಿ 3 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ’ ಎಂದು ಹೇಳಿದರು.

‘20 ಪ್ರಕರಣಗಳಲ್ಲಿ 5 ಮಂದಿ ಗುಣಮುಖರಾಗಿದ್ದು, ಅವರನ್ನು ವಾರದ ನಂತರ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುತ್ತದೆ. ಕೊರೊನಾ ಸೋಂಕಿನಲ್ಲಿ ಭಾರತವು 2ನೇ ಹಂತದಲ್ಲಿದ್ದು, ಮುಂದಿನ ಹಂತಕ್ಕೆ ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

‘20 ದಿನಗಳಿಂದ ಹೊರ ದೇಶಗಳಿಂದ ಬಂದವರನ್ನು ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿ ಇರಿಸಬೇಕು. ಅವರ ಪ್ರವಾಸದ ವಿವರ ಪ್ರಮುಖವಾಗಿದ್ದು, ಈ ಬಗ್ಗೆ ಜಾಗೃತಿ ವಹಿಸಬೇಕು. ಖಾಸಗಿ ವೈದ್ಯಕೀಯ ಕಾಲೇಜಿಗಳಲ್ಲೂ ತುರ್ತು ಪರಿಸ್ಥಿತಿ ನಿರ್ವಹಣೆಗೆ ಬೆಡ್‌ ಕಾದಿರಿಸಬೇಕು. ಪ್ರತಿ ಐಸೋಲೇಷನ್ ಬೆಡ್‌ನ ನಡುವೆ 1.5 ಮೀಟರ್ ಅಂತರವಿರಬೇಕು’ ಎಂದು ಸೂಚಿಸಿದರು.

‘ಅತಿ ಹೆಚ್ಚು ಜನಸಂದಣಿಯಿರುವ ಕಂದಾಯ ಇಲಾಖೆ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸುವಂತೆ ಆದೇಶಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಸೇವೆ ಮುಂದೂಡಿಕೆ: ‘ಆಸ್ಪತ್ರೆಗಳಲ್ಲಿ ತುರ್ತು ಸೇವೆ ಮಾತ್ರ ನೀಡಬೇಕು. 3 ವಾರದ ನಂತರ ನೀಡಬಹುದಾದ ವೈದ್ಯಕೀಯ ಸೇವೆ ಮುಂದೂಡಬೇಕು. ಬಾರ್ ಮತ್ತು ರೆಸ್ಟೋರೆಂಟ್‌ ಕಡ್ಡಾಯವಾಗಿ ಬಂದ್ ಮಾಡಬೇಕು. ಹೋಟೆಲ್‌ಗಳಲ್ಲಿ ಪಾರ್ಸಲ್ ಸೇವೆ ಮಾತ್ರ ನೀಡಬೇಕು. ಎಲ್ಲರೂ ಮುಖಗವಸು ಧರಿಸುವ ಅಗತ್ಯವಿಲ್ಲ. ರೋಗದ ಲಕ್ಷಣ ಕಂಡು ಬಂದವರು ಹಾಗೂ ಹೊರ ದೇಶದಿಂದ ಬಂದವರು ಮುಖಗವಸು ಧರಿಸಬೇಕು. ಕೋವಿಡ್–19 ದೃಢಪಟ್ಟವರು ಮಾತ್ರ ಎನ್-–95 ಮುಖಗವಸು ಧರಿಸಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.