ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಓಟ ಮುಂದುವರಿದಿದ್ದು, 3 ಮಂದಿ ಸೋಂಕಿತರು ಭಾನುವಾರ ಮೃತಪಟ್ಟಿದ್ದಾರೆ.
ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಮುಳಬಾಗಿಲು ತಾಲ್ಲೂಕಿನ ಮೂವರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 379ಕ್ಕೆ ಏರಿಕೆಯಾಗಿದೆ.
ಇದರ ಬೆನ್ನಲ್ಲೇ ಹೊಸದಾಗಿ 341 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 7,233ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 96 ಮಂದಿಗೆ, ಮಾಲೂರು ತಾಲ್ಲೂಕಿನ 50 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 33 ಮಂದಿಗೆ, ಕೆಜಿಎಫ್ ತಾಲ್ಲೂಕಿನ 20 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 64 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 78 ಮಂದಿಗೆ ಸೋಂಕು ಬಂದಿದೆ.
ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 418 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 181 ಮಂದಿ, ಮಾಲೂರು ತಾಲ್ಲೂಕಿನ 57, ಬಂಗಾರಪೇಟೆ ತಾಲ್ಲೂಕಿನ 60, ಕೆಜಿಎಫ್ ತಾಲ್ಲೂಕಿನ 26, ಮುಳಬಾಗಿಲು ತಾಲ್ಲೂಕಿನ 15 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 79 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.