ಕೋಲಾರ: ಕೊರೊನಾ ಸೋಂಕಿನ ಆತಂಕದ ನಡುವೆಯೂ ಜಿಲ್ಲೆಯಲ್ಲಿ ಮಂಗಳವಾರ ಗಣರಾಜ್ಯೋತ್ಸವ ಆಚರಣೆಯು ಕಳೆಗಟ್ಟಿತು.
ಜಿಲ್ಲಾ ಕೇಂದ್ರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸರ್ ಬಳಕೆ ಮಾಡಿ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಯಿತು.
ಸರ್ಕಾರಿ ಕಚೇರಿಗಳು, ಬ್ಯಾಂಕ್ ಹಾಗೂ ನ್ಯಾಯಾಲಯ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರಮುಖ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿ, ರಾಷ್ಟ್ರಗೀತೆ ಹಾಡಿ ಗೌರವ ಸೂಚಿಸಲಾಯಿತು.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಪೊಲೀಸ್ ಸಿಬ್ಬಂದಿ ಪ್ರತಿ ವ್ಯಕ್ತಿಯನ್ನು ತಪಾಸಣೆ ಮಾಡಿ ಕ್ರೀಡಾಂಗಣದ ಒಳ ಹೋಗಲು ಬಿಟ್ಟರು. ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಪೊಲೀಸ್ ಸಿಬ್ಬಂದಿಯು ಆಕರ್ಷಕ ಪಥಸಂಚಲನದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಕೋಲಾರ ಉಪ ವಿಭಾಗದ ಪೊಲೀಸ್ ಪಡೆ, ಮುಳಬಾಗಿಲು ಉಪ ವಿಭಾಗದ ಪೊಲೀಸ್ ಪಡೆ, ಜಿಲ್ಲಾ ಮಹಿಳಾ ಪೊಲೀಸ್ ಪಡೆ, ಗೃಹರಕ್ಷಕ ದಳ, ಡಿಎಆರ್ ಪೊಲೀಸ್ ವಾದ್ಯ ವೃಂದ ಸಿಬ್ಬಂದಿ ಪಥ ಸಂಚಲನದಲ್ಲಿ ಭಾಗವಹಿಸಿದರು. ಸಚಿವರು, ಸಂಸದರು, ಶಾಸಕರು ಹಾಗೂ ಗಣ್ಯರು ಪಥಸಂಚಲನ ವೀಕ್ಷಿಸಿದರು.
ವಿದ್ಯಾರ್ಥಿಗಳಿಗೆ ಪುರಸ್ಕಾರ: ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಸೇವೆ ಸಲ್ಲಿಸಿದ ಕೊರೊನಾ ವಾರಿಯರ್ಸ್ಗಳನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಅಲ್ಲದೇ, ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು. ವಿವಿಧ ಕ್ರೀಡಾ ಸಂಘ ಸಂಸ್ಥೆಗಳಿಗೆ ಕ್ರೀಡಾ ಕಿಟ್ ಮತ್ತು ಸಮವಸ್ತ್ರ ವಿತರಣೆ ಮಾಡಲಾಯಿತು.
ಅಂತರಗಂಗೆ ರಸ್ತೆಯ ಪ್ರವೇಶ ಭಾಗದಲ್ಲಿ ಬೃಹತ್ ಸ್ವಾಗತ ಕಮಾನು ಹಾಕಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ರಾಷ್ಟ್ರಧ್ವಜಗಳು ರಾರಾಜಿಸುತ್ತಿದ್ದವು. ಆಟೊ ಚಾಲಕರು, ಬಸ್ ಚಾಲಕರು ಹಾಗೂ ಬೈಕ್ ಸವಾರರು ವಾಹನಗಳ ಮೇಲೆ ರಾಷ್ಟ್ರಧ್ವಜ ಹಾಕಿಕೊಂಡು ಓಡಾಡುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.