ಕೋಲಾರ: ಎಸ್ಸೆಸ್ಸೆಲ್ಸಿ ತರಗತಿ ಹಾಗೂ 6ನೇ ತರಗತಿಯಿಂದ 9ನೇ ತರಗತಿವರೆಗೆ ವಿದ್ಯಾಗಮ ಆರಂಭವಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಅವರು ತಾಲ್ಲೂಕಿನ ವಿವಿಧ ಶಾಲೆಗಳಿಗೆ ಮಂಗಳವಾರ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿ ಪಾಲನೆ ಪರಿಶೀಲಿಸಿದರು.
ಶಾಲೆಗಳಲ್ಲಿ ಸ್ವಚ್ಛತೆ ಪಾಲನೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಾಸ್ಕ್ ಧರಿಸಿರುವುದು, ಸ್ಯಾನಿಟೈಸರ್ ಬಳಕೆ ಹಾಗೂ ಅಂತರ ಪಾಲನೆ ಬಗ್ಗೆ ಬಿಇಒ ಪರಿಶೀಲನೆ ಮಾಡಿದರು.
‘ಕೋವಿಡ್ನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಕೋವಿಡ್ ಆತಂಕದ ನಡುವೆಯೂ ಸರ್ಕಾರ ಶಾಲೆ ಆರಂಭಕ್ಕೆ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಮುಖ್ಯ. ಈ ವಿಚಾರದಲ್ಲಿ ಶಿಕ್ಷಕರು ನಿರ್ಲಕ್ಷ್ಯ ತೋರಬಾರದು. ಅದೇ ರೀತಿ ಶಿಕ್ಷಕರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು’ ಎಂದು ಬಿಇಒ ಎಚ್ಚರಿಕೆ ನೀಡಿದರು.
‘ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲದೆ ಸಮಸ್ಯೆಯಾಗಿದ್ದರೆ ತಾತ್ಕಾಲಿಕವಾಗಿ ಸರ್ಕಾರಿ ಶಾಲೆಗಳ ಹೆಚ್ಚುವರಿ ಕಟ್ಟಡ ಬಳಸಿಕೊಳ್ಳಬಹುದು. ಕೆಲ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಕೊಠಡಿಗಳು ಕಡಿಮೆ ಇವೆ. ಅಂತಹ ಕಡೆ ಅಂಗನವಾಡಿ ಕೇಂದ್ರಗಳಿಗೆ ಬೋಧನಾ ಕೊಠಡಿ ಕೊಡಲು ಸಾಧ್ಯವಾಗುವುದಿಲ್ಲ. ಮೊದಲು ಸರ್ಕಾರಿ ಶಾಲಾ ಮಕ್ಕಳಿಗೆ ಆದ್ಯತೆ ನೀಡಿ ಕೊಠಡಿಗಳನ್ನು ಬಳಸಿಕೊಂಡು ಹೆಚ್ಚುವರಿಯಾಗಿ ಉಳಿದಿದ್ದರೆ ಮಾತ್ರ ಅಂಗವಾಡಿಗಳಿಗೆ ನೀಡಿ’ ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಶಿಕ್ಷಣ ಸಂಯೋಜಕರಾದ ಆರ್.ಶ್ರೀನಿವಾಸನ್, ವೆಂಕಟಾಚಲಪತಿ, ಮುನಿರಾಜು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.