ADVERTISEMENT

ಮಳೆಯಿಂದ ಬೆಳೆ ನಷ್ಟ: ಪರಿಹಾರ ಭರವಸೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2019, 14:19 IST
Last Updated 22 ಏಪ್ರಿಲ್ 2019, 14:19 IST
ಕೋಲಾರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಬೆಳೆ ವಿಮೆ ಕಂಪನಿ ಪ್ರತಿನಿಧಿಗಳಿಂದ ಮಾಹಿತಿ ಪಡೆದರು.
ಕೋಲಾರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಬೆಳೆ ವಿಮೆ ಕಂಪನಿ ಪ್ರತಿನಿಧಿಗಳಿಂದ ಮಾಹಿತಿ ಪಡೆದರು.   

ಕೋಲಾರ: ‘ಬೆಳೆ ವಿಮೆ ಕಂಪನಿಯವರು ಅರ್ಹ ರೈತರಿಗೆ ಸಕಾಲಕ್ಕೆ ಬೆಳೆ ಪರಿಹಾರದ ಹಣ ಪಾವತಿಸದಿದ್ದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಎಚ್ಚರಿಕೆ ನೀಡಿದರು.

ಇಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಬೆಳೆ ವಿಮೆ ಕಂಪನಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಆಗಿರುವ ಬೆಳೆ ನಷ್ಟದ ಬಗ್ಗೆ ಸಮೀಕ್ಷ ನಡೆಯುತ್ತಿದೆ. ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಲಾಗುವುದು’ ಎಂದರು.

‘ಹಿಂದಿನ ವರ್ಷ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾಗಿದ್ದು, ಮೊದಲ ಹಂತದಲ್ಲಿ ಪ್ರತಿ ಹೆಕ್ಟೇರ್‌ಗೆ ₹ 6,800ರಂತೆ 1,128 ಗ್ರಾಮಗಳ 93,768 ಫಲಾನುಭವಿಗಳಿಗೆ ₹ 1.29 ಕೋಟಿ ಬೆಳೆ ಪರಿಹಾರ ನೀಡಲಾಗಿದೆ’ ಎಂದು ವಿವರಿಸಿದರು.

ADVERTISEMENT

‘ಮುಂಗಾರು ಹಂಗಾಮಿನಲ್ಲಿ 6 ತಾಲ್ಲೂಕುಗಳ 1,723 ಗ್ರಾಮಗಳಲ್ಲಿ ರಾಗಿ, ನೆಲಗಡಲೆ, ತೊಗರಿ ಬೆಳೆ ನಷ್ಟವಾಗಿತ್ತು. ಮೊಬೈಲ್ ಆ್ಯಪ್ ಮೂಲಕ ಬೆಳೆ ನಷ್ಟದ ಮಾಹಿತಿ ಸಂಗ್ರಹಿಸಲಾಗಿತ್ತು. ಆ ಮಾಹಿತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಲಾಗಿದೆ. ಎರಡನೇ ಹಂತದಲ್ಲಿ 719 ಗ್ರಾಮಗಳ 63,145 ಫಲಾನುಭವಿಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಮುಂದುವರಿದಿದ್ದು, ಸದ್ಯದಲ್ಲೇ ಹಣ ವಿತರಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘ಇತ್ತೀಚೆಗೆ ಸುರಿದ ಮಳೆಯಿಂದ ಶ್ರೀನಿವಾಸಪುರ ಭಾಗದಲ್ಲಿ ಮಾವು, ಮುಳಬಾಗಿಲು ತಾಲ್ಲೂಕಿನ ಕೆಲವೆಡೆ ಬಾಳೆ ಬೆಳೆ ನಾಶವಾಗಿದೆ. ಜಿಲ್ಲೆಯ ವಿವಿಧೆಡೆ ಪರಂಗಿ ಹಾಗೂ ತರಕಾರಿ ಬೆಳೆಗಳು ನಾಶವಾಗಿವೆ. ಈ ಬಗ್ಗೆ ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡುತ್ತಾರೆ. ಬೆಳೆ ಕಳೆದುಕೊಂಡ ರೈತರಿಗೆ ಮಾನವೀಯತೆ ದೃಷ್ಟಿಯಿಂದ ಪರಿಹಾರ ನೀಡಲಾಗುತ್ತದೆ’ ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.