ADVERTISEMENT

ಕೋಲಾರ: ಆಸ್ಪತ್ರೆಯಲ್ಲಿ 4 ಸೋಂಕಿತರ ಕೊನೆಯುಸಿರು

ಜಿಲ್ಲೆಯಲ್ಲಿ 29ಕ್ಕೆ ಏರಿದ ಸಾವಿನ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 15:21 IST
Last Updated 4 ಆಗಸ್ಟ್ 2020, 15:21 IST

ಕೋಲಾರ: ಜಿಲ್ಲೆಯಲ್ಲಿ ಮಂಗಳವಾರ 4 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಆರ್‌.ಎಲ್‌ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆಜಿಎಫ್‌ ನಗರದ ಹೆನ್ಸಿಸ್‌ ಕಾಲೊನಿಯ ಸೋಂಕಿತ ಮಹಿಳೆ, ಬೆಮಲ್‌ ನಗರದ ಪುರುಷ, ಅಂಬೇಡ್ಕರ್‌ ನಗರದ ವೃದ್ಧೆ ಹಾಗೂ ಕೋಲಾರ ತಾಲ್ಲೂಕಿನ ಸೋಂಕಿತ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 46 ಮಂದಿಗೆ ಸೋಂಕು ಹರಡಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 662ಕ್ಕೆ ಹೆಚ್ಚಳವಾಗಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 4 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ತಗುಲಿದೆ.

ADVERTISEMENT

ಬಂಗಾರಪೇಟೆ ತಾಲ್ಲೂಕಿನಲ್ಲಿ 3 ಮಂದಿಗೆ, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ 5 ಮಂದಿಯೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.

ಸಂಪರ್ಕದ ನಂಟು: ಕೋಲಾರ ಮತ್ತು ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು ತಲಾ 18 ಮಂದಿಗೆ ಸೋಂಕು ತಗುಲಿದೆ. ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 7 ಮಂದಿಗೆ, ಸೋಂಕಿತರ ಸಂಪರ್ಕದಿಂದ 6 ಮಂದಿಗೆ, 4 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ಬಂದಿದೆ.

ಮಾಲೂರು ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕವು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಸೋಂಕಿತ ವ್ಯಕ್ತಿ ಸಂಖ್ಯೆ 1,45,053ರ ಪ್ರಕರಣದಿಂದ 5 ಮಂದಿಗೆ, 98,677ರ ಪ್ರಕರಣದಿಂದ 4 ಮಂದಿಗೆ ಸೋಂಕು ತಗುಲಿದೆ. ಜತೆಗೆ ಇತರೆ ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ಹರಡಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ, ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

51 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿರುವ ಸೋಂಕಿತರ ಪೈಕಿ ಮಂಗಳವಾರ 51 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 27 ಮಂದಿ, ಮಾಲೂರು ತಾಲ್ಲೂಕಿನ ಇಬ್ಬರು, ಬಂಗಾರಪೇಟೆ ತಾಲ್ಲೂಕು 6, ಕೆಜಿಎಫ್‌ ತಾಲ್ಲೂಕು 7, ಮುಳಬಾಗಿಲು ತಾಲ್ಲೂಕು 8 ಹಾಗೂ ಶ್ರೀನಿವಾಸಪುರ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.