ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ನಾಗಾಲೋಟ ಮುಂದುವರಿದಿದ್ದು, ಭಾನುವಾರ 8 ಮಂದಿ ಮೃತಪಟ್ಟಿದ್ದಾರೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ, ಕೆಜಿಎಫ್ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಮಾಲೂರು ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 417ಕ್ಕೆ ಏರಿಕೆಯಾಗಿದೆ.
ಸೋಂಕು ಹರಡುವಿಕೆ ಪ್ರಮಾಣ ಕೊಂಚ ಇಳಿಕೆಯಾಗಿದ್ದು, ಹೊಸದಾಗಿ 257 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ತಾಲ್ಲೂಕಿನ 52 ಮಂದಿಗೆ, ಮಾಲೂರು ತಾಲ್ಲೂಕಿನ 53 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 25 ಮಂದಿಗೆ, ಕೆಜಿಎಫ್ ತಾಲ್ಲೂಕಿನ 44 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 38 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 45 ಮಂದಿಗೆ ಸೋಂಕು ಬಂದಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 4,908ಕ್ಕೆ ಜಿಗಿದಿದೆ.
ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣ ದಾಖಲೆ ಏರಿಕೆ ಕಂಡಿದೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 874 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.
ಕೋಲಾರ ತಾಲ್ಲೂಕಿನ 231 ಮಂದಿ, ಮಾಲೂರು ತಾಲ್ಲೂಕಿನ 188, ಬಂಗಾರಪೇಟೆ ತಾಲ್ಲೂಕಿನ 89, ಕೆಜಿಎಫ್ ತಾಲ್ಲೂಕಿನ 74, ಮುಳಬಾಗಿಲು ತಾಲ್ಲೂಕಿನ 162 ಮಂದಿ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 130 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.