ಕೋಲಾರ: ‘ಸರ್ಕಾರವು ಜನರ ಅಭ್ಯುದಯಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸಬೇಕು’ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಮುನಿರತ್ನ ಸೂಚಿಸಿದರು.
ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಜನರ ಸೇವೆ ಮಾಡುವ ಮನೋಭಾವ ಅಧಿಕಾರಿಗಳಲ್ಲಿ ಬಲಗೊಳ್ಳಬೇಕು. ಕಷ್ಟದಲ್ಲಿರುವ ಜನರಿಗೆ ಸಹಾಯ ನೀಡುವುದು ಸರ್ಕಾರದ ಜವಾಬ್ದಾರಿ, ಅದನ್ನು ನಾವು ಮಾಡುತ್ತೇವೆ. ಇದಕ್ಕೆ ಪೂರಕವಾಗಿ ಆಡಳಿತ ಯಂತ್ರ ಕೆಲಸ ಮಾಡಬೇಕು’ ಎಂದು ಹೇಳಿದರು.
‘ಕಾಮಗಾರಿಗಳಲ್ಲಿ ಗುಣಮಟ್ಟ ಹಾಗೂ ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಮುಂದೆ ಪ್ರತಿ ಇಲಾಖೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಡುತ್ತೇವೆ. ಆಡಳಿತ ಯಂತ್ರವು ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚು ಗಮನ ಹರಿಸಬೇಕು. ಕೊರೊನಾ ಸೋಂಕಿತರಿಗೆ ಉತ್ತಮ ವೈದ್ಯಕೀಯ ಸೇವೆ ಸಿಗಬೇಕು. ಇದರಲ್ಲಿ ಲೋಪವಾಗಬಾರದು’ ಎಂದು ಆದೇಶಿಸಿದರು.
‘ಹಣಕಾಸು ವರ್ಷದ ಅಂತ್ಯದಲ್ಲಿದ್ದೇವೆ. ಜಿಲ್ಲೆಗೆ ಅಭಿವೃದ್ಧಿಗೆ ಬಂದಿರುವ ಅನುದಾನ ವಾಪಸ್ ಹೋಗದಂತೆ ಸದ್ಬಳಕೆ ಮಾಡಬೇಕು. ಇದು ಅಧಿಕಾರಿಗಳ ಆದ್ಯ ಕರ್ತವ್ಯ’ ಎಂದು ಜಿಲ್ಲಾಧಿಕಾರಿ ವೆಂಕಟರಾಜು ಕಿವಿಮಾತು ಹೇಳಿದರು.
ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯುಕೇಶ್ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ಉಪ ವಿಭಾಗಾಧಿಕಾರಿ ಆನಂದ್ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಘೋರ್ಪಡೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.