ಕೋಲಾರ: ರಾಜ್ಯ ಮತ್ತು ಕೇಂದ್ರ ಸರ್ಕಾರ ಕೋವಿಡ್ ಮೂರನೇ ಅಲೆಯನ್ನು ಸಮರ್ಪಕವಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಿಪಿಎಂ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಕೊರೊನಾ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು. ಸಾರ್ವತ್ರಿಕವಾಗಿ ಉಚಿತ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಬೇಕು. ಮನೆ ಆರೈಕೆಯಲ್ಲಿರುವ ಸೋಂಕಿತರಿಗೆ ಅಗತ್ಯ ನೆರವು ನೀಡಬೇಕು. ಆರೋಗ್ಯ ವಲಯಕ್ಕೆ ಬಜೆಟ್ ಅನುದಾನ ಹೆಚ್ಚಿಸಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಮುಖಂಡ ಟಿ.ಎಂ. ವೆಂಕಟೇಶ್ ಒತ್ತಾಯಿಸಿದರು.
ಕಾರ್ಮಿಕ ವಿರೋಧಿಯಾದ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಬಾರದು. ಕಾರ್ಮಿಕ ಸಂಘಗಳ ಮಾನ್ಯತೆ, ಗುತ್ತಿಗೆ ಮುಂತಾದ ಕಾಯಂಗೆ, ಅಸಂಘಟಿತರಿಗೆ ಶಾಸನಬದ್ಧ ಭವಿಷ್ಯ ನಿಧಿಗಾಗಿ ಶಾಸನ ರೂಪಿಸಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಕಾಯ್ದೆ, ಭೂ ಕಂದಾಯ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಆಯೋಗ ರೂಪಿಸಬೇಕು ಎಂದು ಆಗ್ರಹಿಸಿದರು.
ಸಿಪಿಎಂ ತಾಲ್ಲೂಕು ಸಮಿತಿ ಸದಸ್ಯರಾದ ಎಂ. ವಿಜಯಕೃಷ್ಣ, ಪಿ.ವಿ. ರಮಣ್, ಭೀಮರಾಜ್, ಸುಶೀಲಾ, ಲೋಕೇಶ್ವರಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.