ಕೋಲಾರ: ಹಾಲಿನ ಉತ್ಪನ್ನಗಳು ಹಾಗೂ ಯಂತ್ರೋಪಕರಣಗಳ ಮೇಲೆ ವಿಧಿಸಿರುವ ಜಿಎಸ್ಟಿ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಆಶ್ರಯದಲ್ಲಿ ಜಿಲ್ಲೆಯಾದ್ಯಂತ ರೈತರು ಸಹಕಾರ ಸಂಘಗಳ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹ ಚಳವಳಿ ನಡೆಸಿದರು.
‘ಹಾಲು ಉತ್ಪಾದಕರ ಮೇಲೆ ತೆರಿಗೆಯ ಭಾರ ಏರಿದಂತಾಗಿದೆ. ಅಧಿಕಾರಕ್ಕೆ ಬರುವ ಮೊದಲು ರೈತರ ಉತ್ಪನ್ನಗಳ ಮೇಲೆ ಯಾವುದೇ ತೆರಿಗೆ ವಿಧಿಸುವುದಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಈಗ ಜಿಎಸ್ಟಿ ವಿಧಿಸಿ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ’ ಎಂದು ಆಕ್ರೋಶ
ವ್ಯಕ್ತಪಡಿಸಿದರು.
‘ಹೈನು ಉದ್ಯಮವನ್ನು ಸಾಮ್ರಾಜ್ಯಶಾಹಿ ರಾಷ್ಟ್ರಗಳು ಮತ್ತು ಬಂಡವಾಳಶಾಹಿ ಕಾರ್ಪೊರೇಟ್ ಶಕ್ತಿಗಳ ಕೈಗೆ ನೀಡಲು ಮುಂದಾಗಿದ್ದು, ಭಾರತದ ಹೈನುಗಾರಿಕೆಯನ್ನು ಸರ್ವನಾಶ ಮಾಡಿದಂತಾಗುತ್ತದೆ. ಹಾಲಿನ ದರ ಕುಸಿತ ಮತ್ತು ನಿಯಂತ್ರಣವಿಲ್ಲದ ಪಶು ಆಹಾರ ಬೆಲೆ ಏರಿಕೆ ಹಾಗೂ ಇನ್ನಿತರೆ ಸಮಸ್ಯೆಗಳಿಂದ ರೈತರು ಈಗಾಗಲೇಸಂಕಷ್ಟ ಎದುರಿಸುತ್ತಿದ್ದಾರೆ. ಜಿಎಸ್ಟಿ ಜಾರಿಯಿಂದ ಈ ಕ್ಷೇತ್ರದಿಂದಲೇ ದೂರ ಉಳಿಯಬೇಕಾಗುತ್ತದೆ. ಆದ್ದರಿಂದ ತೆರಿಗೆಯನ್ನು ಕೂಡಲೇ ವಾಪಸ್ ಪಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.