ADVERTISEMENT

ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸಿ: ರೈತ ಸಂಘ ಸದಸ್ಯರ ಮನವಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 15:24 IST
Last Updated 18 ಆಗಸ್ಟ್ 2021, 15:24 IST
ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸುವಂತೆ ಕೋರಿ ಸಾಮೂಹಿಕ ನಾಯಕತ್ವ ರೈತ ಸಂಘದ ಸದಸ್ಯರು ಕೋಲಾರದಲ್ಲಿ ಬುಧವಾರ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‌ರಾಜ್ ಸಿಂಗ್ ಮನವಿ ಸಲ್ಲಿಸಿದರು
ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸುವಂತೆ ಕೋರಿ ಸಾಮೂಹಿಕ ನಾಯಕತ್ವ ರೈತ ಸಂಘದ ಸದಸ್ಯರು ಕೋಲಾರದಲ್ಲಿ ಬುಧವಾರ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‌ರಾಜ್ ಸಿಂಗ್ ಮನವಿ ಸಲ್ಲಿಸಿದರು   

ಕೋಲಾರ: ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸುವಂತೆ ಕೋರಿ ಸಾಮೂಹಿಕ ನಾಯಕತ್ವ ರೈತ ಸಂಘದ ಸದಸ್ಯರು ಇಲ್ಲಿ ಬುಧವಾರ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‌ರಾಜ್ ಸಿಂಗ್ ಮನವಿ ಸಲ್ಲಿಸಿದರು.

‘ರಿಯಲ್‌ ಎಸ್ಟೇಟ್‌ ಮಾಫಿಯಾ ಜಿಲ್ಲೆಯ ಬಹುಪಾಲು ಕೆರೆಗಳು ಹಾಗೂ ರಾಜಕಾಲುವೆಗಳನ್ನು ಒತ್ತುವರಿ ಮಾಡಿದೆ. ಕೆರೆಯಂಗಳ ಹಾಗೂ ರಾಜಕಾಲುವೆಗಳ ಜಾಗದಲ್ಲಿ ಅನಧಿಕೃತ ಲೇಔಟ್‌ಗಳು ತಲೆ ಎತ್ತಿವೆ. ಲಂಚದಾಸೆಗೆ ಅಧಿಕಾರಿಗಳೇ ಈ ಅಕ್ರಮಕ್ಕೆ ಕೈಜೋಡಿಸಿದ್ದಾರೆ’ ಎಂದು ಸಂಘಟನೆ ಸದಸ್ಯರು ಆರೋಪಿಸಿದರು.

‘ಕೆರೆಗಳ ತವರು ಎಂದು ಹೆಸರಾಗಿರುವ ಕೋಲಾರ ಜಿಲ್ಲೆಯಲ್ಲಿ 2,800ಕ್ಕೂ ಹೆಚ್ಚು ಕೆರೆಗಳಿವೆ. ಈ ಹಿಂದೆ ಮಳೆಗಾಲದಲ್ಲಿ ಎಲ್ಲಾ ಕೆರೆಗಳು ತುಂಬುತ್ತಿದ್ದವು. ಆದರೆ, ಭೂಗಳ್ಳರ ಹಾವಳಿಯಿಂದ ಕೆರೆ, ರಾಜಕಾಲುವೆಗಳು ಕಣ್ಮರೆಯಾಗಿವೆ’ ಎಂದು ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಕಳವಳ ವ್ಯಕ್ತಪಡಿಸಿದರು.

ADVERTISEMENT

‘ನಕಲಿ ದಾಖಲೆಪತ್ರ ಸೃಷ್ಟಿಸಿ ಗ್ರಾಮೀಣ ಭಾಗದ ಸರ್ಕಾರಿ ಗೋಮಾಳ, ಗುಂಡು ತೋಪು, ಸ್ಮಶಾನ, ಕೆರೆ ಅಂಗಳ ಒತ್ತುವರಿ ಮಾಡಲಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ಹಲವು ಬಾರಿ ದೂರು ಕೊಟ್ಟಿದ್ದೇವೆ. ಆದರೆ, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಸರ್ಕಾರಿ ಜಮೀನು ರಕ್ಷಿಸಬೇಕಾದ ಅಧಿಕಾರಿಗಳೇ ಭೂಗಳ್ಳರ ಜತೆ ಶಾಮೀಲಾಗಿದ್ದಾರೆ’ ಎಂದು ದೂರಿದರು.

ಸಬೂಬು: ‘ಕಂದಾಯ ಮತ್ತು ಸರ್ವೆ ಇಲಾಖೆಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಿದೆ. ಲಂಚ ಕೊಡದೆ ರೈತರ ಕೆಲಸಗಳೇ ಆಗುತ್ತಿಲ್ಲ. ಪಹಣಿ ಪಡೆಯಲು ತಿಂಗಳುಗಟ್ಟಲೇ ಅಲೆಯುವ ಪರಿಸ್ಥಿತಿಯಿದೆ. ಸರ್ವೆಗೆ ಅರ್ಜಿ ಸಲ್ಲಿಸಿ 6 ತಿಂಗಳಾದರೂ ಸಮಸ್ಯೆ ಬಗೆಹರಿಯುತ್ತಿಲ್ಲ. ಈ ಬಗ್ಗೆ ಪ್ರಶ್ನೆ ಮಾಡಿದರೆ ಅಧಿಕಾರಿಗಳು ಸಿಬ್ಬಂದಿ ಕೊರತೆ ಹಾಗೂ ಸರ್ವರ್ ಸಮಸ್ಯೆ ಎಂದು ಹೇಳುತ್ತಾರೆ’ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ಸಣ್ಣಪುಟ್ಟ ಜಮೀನು ಒತ್ತುವರಿ ಮಾಡುವ ರೈತರ ಮೇಲೆ ಶಿಸ್ತುಕ್ರಮ ಜರುಗಿಸುವ ಜಿಲ್ಲಾಡಳಿತ ಕೆರೆ, ರಾಜಕಾಲುವೆಗಳ ಒತ್ತುವರಿ ವಿಚಾರದಲ್ಲಿ ಮೌನಕ್ಕೆ ಶರಣಾಗಿದೆ. ಅಧಿಕಾರಿಗಳು ನೆಪ ಮಾತ್ರಕ್ಕೆ ಕೆಲ ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸಿ ತೆರೆಮರೆಯಲ್ಲಿ ರಿಯಲ್‌ ಎಸ್ಟೇಟ್‌ ದಂಧೆಕೋರರ ಜತೆ ವ್ಯವಹಾರ ನಡೆಸುತ್ತಿದ್ದಾರೆ’ ಎಂದು ಕಿಡಿಕಾರಿದರು.

ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌, ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕಿರಣ್, ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಸದಸ್ಯರಾದ ಹನುಮಯ್ಯ, ನಾಗೇಶ್, ತಿಮ್ಮಣ್ಣ, ಚಂದ್ರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.