ADVERTISEMENT

ಸೇವೆ ಕಾಯಂಗೆ ಒತ್ತಾಯಿಸಿ ಧರಣಿ: ಗುತ್ತಿಗೆ– ಹೊರ ಗುತ್ತಿಗೆ ನೌಕರರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 13:52 IST
Last Updated 26 ಸೆಪ್ಟೆಂಬರ್ 2020, 13:52 IST
ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಕೋಲಾರದಲ್ಲಿ ಶನಿವಾರ ಧರಣಿ ನಡೆಸಿದರು.
ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಕೋಲಾರದಲ್ಲಿ ಶನಿವಾರ ಧರಣಿ ನಡೆಸಿದರು.   

ಕೋಲಾರ: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಇಲ್ಲಿ ಶನಿವಾರ ಧರಣಿ ನಡೆಸಿದರು.

‘ಆರೋಗ್ಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸೇವೆ ಕಾಯಂಗೊಳಿಸುವಂತೆ ಹಲವು ಬಾರಿ ಹೋರಾಟ ಮಾಡಿದ್ದೇವೆ. ಆದರೆ, ಸರ್ಕಾರ ಮನವಿಗೆ ಸ್ಪಂದಿಸುತ್ತಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಸೇವಾ ಭದ್ರತೆ ಇಲ್ಲದ ಕಾರಣ ನೌಕರರ ಕೆಲಸ ಅನಿಶ್ಚಿತವಾಗಿದೆ. ಮತ್ತೊಂದೆಡೆ ಗುತ್ತಿಗೆ ನೌಕರರಿಗೆ ಸರ್ಕಾರದ ಸವಲತ್ತುಗಳು ಸಿಗುತ್ತಿಲ್ಲ. ಕಾಯಂ ನೌಕರರಿಗೆ ಹೋಲಿಸಿದರೆ ಗುತ್ತಿಗೆ ನೌಕರರ ವೇತನ ಕಡಿಮೆಯಿದ್ದು, ಜೀವನ ನಿರ್ವಹಣೆಗೆ ಸಮಸ್ಯೆಯಾಗಿದೆ. ಸರ್ಕಾರಕ್ಕೆ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಧುಕೇಶ್ ಹೇಳಿದರು.

ADVERTISEMENT

‘ಗುತ್ತಿಗೆ ನೌಕರರು ಕೋವಿಡ್‌–19 ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆದರೆ, ಸರ್ಕಾರ ವೇತನ ನೀಡಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ವೇತನ ನೀಡಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು, ನೌಕರರಿಗೆ ಸಕಾಲಕ್ಕೆ ವೇತನ ನೀಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಜೆ ನಿರಾಕರಣೆ: ‘ಇಲಾಖೆ ಅಧಿಕಾರಿಗಳು ಸಣ್ಣಪುಟ್ಟ ಕಾರಣಕ್ಕೆ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುತ್ತಿದ್ದಾರೆ. ಕೆಲಸದ ಅವಧಿ ಮುಗಿದ ನಂತರವೂ ನೌಕರರಿಂದ ಹೆಚ್ಚು ಕೆಲಸ ಮಾಡಿಸಲಾಗುತ್ತಿದೆ. ಇದರಿಂದ ನೌಕರರ ಮೇಲೆ ಕಾರ್ಯ ಒತ್ತಡ ಹೆಚ್ಚಿದೆ. ಸಾಮಾನ್ಯ ರಜಾ ದಿನಗಳಲ್ಲೂ ನೌಕರರು ಕೆಲಸ ಮಾಡುತ್ತಿದ್ದು, ಹೆರಿಗೆ ರಜೆ ಹಾಗೂ ಪಿತೃತ್ವ ರಜೆ ನಿರಾಕರಿಸಲಾಗುತ್ತಿದೆ’ ಎಂದು ಧರಣಿನಿರತರು ಅಳಲು ತೋಡಿಕೊಂಡರು.

‘ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡಾವಾರು ಹೆಚ್ಚಿಸಬೇಕು. ಸೇವೆ ಕಾಯಂಗೊಳಿಸಬೇಕು. ಎಲ್ಲಾ ಹುದ್ದೆಗಳನ್ನು ಕಾಯಂ ಹುದ್ದೆಗಳಾಗಿ ಸೃಷ್ಟಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಏಕರೂಪ ವೇತನ ಮಾದರಿ ಜಾರಿಗೊಳಿಸಬೇಕು. ನೌಕರರ ಬ್ಯಾಂಕ್‌ ಖಾತೆಗೆ ನೇರವಾಗಿ ವೇತನ ಪಾವತಿಸಬೇಕು. ಬೋನಸ್‌, ಆರೋಗ್ಯ ಭಾಗ್ಯ ಯೋಜನೆ ಸೌಲಭ್ಯ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

‘ನೌಕರರ ಕಲ್ಯಾಣನಿಧಿ ಅಥವಾ ಕಲ್ಯಾಣ ಮಂಡಳಿ ಸ್ಥಾಪಿಸಬೇಕು. ಸರ್ಕಾರಿ ನೇಮಕಾತಿಗಳಲ್ಲಿ ವಯಸ್ಸಿನ ಮಿತಿ ವಿಸ್ತರಿಸಬೇಕು. ಸೇವಾನುಭವಕ್ಕೆ ತಕ್ಕಂತೆ ಸೇವಾಂಕ ನೀಡಬೇಕು. ಪರಸ್ಪರ ವರ್ಗಾವಣೆ ಹಾಗೂ ಖಾಲಿಯಿರುವ ಹುದ್ದೆಯಲ್ಲಿ ಸಾಮಾನ್ಯ ವರ್ಗಾವಣೆಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.