ADVERTISEMENT

ಟೊಮೆಟೊ ಬೆಳೆ ನಾಶ: ಪರಿಹಾರಕ್ಕೆ ಒತ್ತಾಯ

ಅಧಿಕಾರಿಗಳು ಕಷ್ಟಕ್ಕೆ ಸ್ಪಂದಿಸುತ್ತಿಲ್ಲ: ರೈತ ಸಂಘ ಸದಸ್ಯರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 11:59 IST
Last Updated 20 ಅಕ್ಟೋಬರ್ 2020, 11:59 IST
ಅಂಗಮಾರಿ ಹಾಗೂ ಚುಕ್ಕಿ ರೋಗದಿಂದ ನಷ್ಟವಾಗಿರುವ ಟೊಮೆಟೊ ಬೆಳೆಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕೋಲಾರದಲ್ಲಿ ಮಂಗಳವಾರ ಧರಣಿ ನಡೆಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಂಗಮಾರಿ ಹಾಗೂ ಚುಕ್ಕಿ ರೋಗದಿಂದ ನಷ್ಟವಾಗಿರುವ ಟೊಮೆಟೊ ಬೆಳೆಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕೋಲಾರದಲ್ಲಿ ಮಂಗಳವಾರ ಧರಣಿ ನಡೆಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.   

ಕೋಲಾರ: ಜಿಲ್ಲೆಯಲ್ಲಿ ಚುಕ್ಕಿ ಮತ್ತು ಅಂಗಮಾರಿ ರೋಗದಿಂದ ನಷ್ಟವಾಗಿರುವ ಟೊಮೆಟೊ ಬೆಳೆಗೆ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಮಂಗಳವಾರ ತೋಟಗಾರಿಕೆ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.

‘ಈ ಹಿಂದೆ ಕೋವಿಡ್–19 ಕಾರಣಕ್ಕೆ ಲಾಕ್‌ಡೌನ್‌ ಜಾರಿ ಮಾಡಿದ್ದರಿಂದ ಸರಕು ಸಾಗಣೆ ಸೇವೆ ಸ್ಥಗಿತಗೊಂಡು ಮತ್ತು ಬೆಲೆ ಕುಸಿತವಾಗಿ ಟೊಮೆಟೊ ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸಿದ್ದರು. ಈಗ ಟೊಮೆಟೊ ಬೆಳೆಯಲ್ಲಿ ಅಂಗಮಾರಿ ಮತ್ತು ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ರೈತರು ನೀರಿನ ಸಮಸ್ಯೆಗೂ ಎದೆಗುಂದದೆ ಸಾವಿರಾರು ಹೆಕ್ಟೇರ್‌ನಲ್ಲಿ ಟೊಮೆಟೊ ಬೆಳೆದಿದ್ದಾರೆ. ಆದರೆ, ಇತ್ತೀಚೆಗೆ ಸುರಿಯುತ್ತಿರುವ ಜಡಿ ಮಳೆಯಿಂದ ಹಾಗೂ ವಾತಾವರಣದಲ್ಲಿ ತೇವಾಂಶ ಹೆಚ್ಚಿರುವ ಕಾರಣಕ್ಕೆ ಟೊಮೆಟೊ ಬೆಳೆಗೆ ಚುಕ್ಕಿ ಮತ್ತು ಅಂಗಮಾರಿ ರೋಗ ಬಂದಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

ADVERTISEMENT

‘ಟೊಮೆಟೊ ಬೆಳೆ ಸಮೃದ್ಧವಾಗಿದ್ದು, ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದೆ. ಆದರೆ, ಅಂಗಮಾರಿ ಮತ್ತು ಚುಕ್ಕಿ ರೋಗದ ಕಾರಣಕ್ಕೆ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ರೋಗಬಾಧೆಯಿಂದ ಬೆಳೆ ನಾಶವಾಗಿ ರೈತರು ಸಾಲದ ಶೂಲಕ್ಕೆ ಸಿಲುಕುವ ಆತಂಕ ಎದುರಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ರೈತರ ಶೋಷಣೆ: ‘ಟೊಮೆಟೊ ಜಿಲ್ಲೆಯ ಪ್ರಮುಖ ಬೆಳೆ. ಬಡ್ಡಿ ಸಾಲ ಮಾಡಿ ಟೊಮೆಟೊ ಬೆಳೆದ ರೈತರು ಸಾಲದ ಕಂತು ಹಾಗೂ ಬಡ್ಡಿ ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕೋವಿಡ್‌–19 ರೈತರನ್ನು ಸಂಕಷ್ಟಕ್ಕೆ ದೂಡಿದೆ. ಮತ್ತೊಂದೆಡೆ ಕೀಟಬಾಧೆಯಿಂದ ಬೆಳೆ ಹಾಳಾಗಿದೆ. ಮಾರುಕಟ್ಟೆಯಲ್ಲಿ ದಲ್ಲಾಳಿಗಳು ತೂಕದಲ್ಲಿ ಮೋಸ ಮಾಡಿ ರೈತರನ್ನು ಶೋಷಿಸುತ್ತಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ನಕಲಿ ಬಿತ್ತನೆ ಬೀಜ ಮಾರಾಟ ಮಳಿಗೆಗಳು ಹಾದಿ ಬೀದಿಯಲ್ಲಿ ತಲೆ ಎತ್ತಿವೆ. ರೈತರಿಗೆ ಕಳಪೆ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ ಮಾರಾಟ ಮಾಡಲಾಗುತ್ತಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಕೀಟಬಾಧೆ ಹತೋಟಿಗೆ ಮಾಹಿತಿ ಕೊಡುತ್ತಿಲ್ಲ’ ಎಂದು ಕಿಡಿಕಾರಿದರು.

ಪ್ರಕರಣ ದಾಖಲಿಸಿ: ‘ರೈತರಿಗೆ ಪ್ರತಿ ಎಕರೆ ಟೊಮೆಟೊ ಬೆಳೆಗೆ ₹ 1 ಲಕ್ಷ ಪರಿಹಾರ ನೀಡಬೇಕು. ಬಿತ್ತನೆ ಬೀಜ ಗುಣಮಟ್ಟದ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಕಳಪೆ ಬಿತ್ತನೆ ಬೀಜ ಮಾರುವ ಅಂಗಡಿಗಳ ಪರವಾನಗಿ ರದ್ದುಪಡಿಸಬೇಕು. ಅಂಗಮಾರಿ ಮತ್ತು ಚುಕ್ಕಿ ರೋಗ ಹತೋಟಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಬೇಕು. ಕೀಟನಾಶಕ ಖರೀದಿಗೆ ಸಹಾಯಧನ ನೀಡಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ವಿ.ಮಂಜುನಾಥ್, ಸದಸ್ಯರಾದ ಸುಪ್ರೀಂಚಲ, ತಿಮ್ಮಣ್ಣ, ನಾಗೇಶ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.