ADVERTISEMENT

ಹಳ್ಳಿಗಳು ಉದ್ಧಾರವಾದರೆ ದೇಶದ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 14:27 IST
Last Updated 22 ಫೆಬ್ರುವರಿ 2021, 14:27 IST
ಕೋಲಾರದಲ್ಲಿ ಸೋಮವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಪಾಲ್ಗೊಂಡರು.
ಕೋಲಾರದಲ್ಲಿ ಸೋಮವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಪಾಲ್ಗೊಂಡರು.   

ಕೋಲಾರ: ‘ಹಳ್ಳಿಗಳೇ ದೇಶದ ಜೀವಾಳ. ಹಳ್ಳಿಗಳು ಉದ್ಧಾರವಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಬಾಬು ಅಭಿಪ್ರಾಯಪಟ್ಟರು.

ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಚರಂಡಿ, ರಸ್ತೆ, ಕುಡಿಯುವ ನೀರು, ಬೀದಿದೀಪ ಸೇರಿದಂತೆ ಹಲವು ಸಮಸ್ಯೆಗಳಿವೆ. ಇದರಿಂದ ಜನರ ಜೀವನಕ್ಕೆ ಕಷ್ಟವಾಗಿದೆ. ಗ್ರಾ.ಪಂ ಸದಸ್ಯರು ಜನರ ಸಮಸ್ಯೆ ಅರಿತು ಪರಿಹರಿಸುವ ಪ್ರಯತ್ನ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಬೇಕು. ಈ ನಿಟ್ಟಿನಲ್ಲಿ ಚುನಾಯಿತ ಸದಸ್ಯರು ಹಾಗೂ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು. ಸವಲತ್ತು ನೀಡಿಕೆಯಲ್ಲಿ ಅರ್ಹರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಚುನಾವಣೆಯಲ್ಲಿ ಗೆದ್ದು ಬಂದಿರುವ ಸದಸ್ಯರು ಗ್ರಾಮದ ಜನರಿಗೆ ಕೆಲ ಭರವಸೆ ನೀಡಿರುತ್ತೀರಿ. ಅಧಿಕಾರಾವಧಿ ಮುಗಿಯುವುದಕ್ಕೂ ಮುನ್ನ ಆ ಭರವಸೆಗಳನ್ನು ಈಡೇರಿಸಿ ಹೆಸರು ಗಳಿಸಬೇಕು. ತರಬೇತಿಯಲ್ಲಿ ಗ್ರಾಮೀಣ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮಾಹಿತಿ ನೀಡಲಾಗುತ್ತದೆ. ಸದಸ್ಯರ ಜನಪರವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ, ತಾಲ್ಲೂಕಿನ ವಿವಿಧ ಗ್ರಾ.ಪಂ ಸದಸ್ಯರು, ಮುದುವತ್ತಿ ಪಿಡಿಒ ಸುನಿತಾ. ಉರಿಗಿಲಿ ಪಿಡಿಒ ರವಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.