ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆ ನೀರು ಹರಿಸುವ ಉದ್ದೇಶಕ್ಕಾಗಿ ತಾರತಮ್ಯ ಎಸಗಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್.ನಂಜುಂಡಪ್ಪ ಆರೋಪಿಸಿದ್ದಾರೆ.
ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ನಡೆದ ನೀರಾವರಿ ಹೋರಾಟದ ಪ್ರತಿಫಲವಾಗಿ ಕೆ.ಸಿ ವ್ಯಾಲಿ ಯೋಜನೆ ಜಾರಿಗೊಂಡಿತು. ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ, ಕೆ.ಸಿ ವ್ಯಾಲಿ ನೀರು ಹಂಚಿಕೆಯಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದೂರಿದ್ದಾರೆ.
ಕೋಲಾರ ವಿಧಾನಸಭಾ ಕ್ಷೇತ್ರದ ಕೆರೆಗಳಿಗೂ ಕೆ.ಸಿ ವ್ಯಾಲಿ ನೀರು ಹರಿದು ಬರುತ್ತಿದೆ. ನರಸಾಪುರದಿಂದ ಅಮ್ಮೇರಹಳ್ಳಿ ಕೆರೆವರೆಗೆ ಒಂದು ಕೆರೆ ಪೂರ್ತಿ ತುಂಬಿದ ನಂತರ ಮತ್ತೊಂದು ಕೆರೆಗೆ ನೀರು ಹರಿಸಲಾಗುತ್ತಿದೆ. ಆದರೆ, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಸ್.ಅಗ್ರಹಾರ ಕೆರೆ ಪೂರ್ತಿ ತುಂಬಿಲ್ಲದಿದ್ದರೂ ತರಾತುರಿಯಲ್ಲಿ ಜನ್ನಘಟ್ಟ ಕೆರೆಗೆ ನೀರು ಹರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆ.ಸಿ ವ್ಯಾಲಿ ಯೋಜನೆ ಮತ್ತು ನೀರು ಹಂಚಿಕೆಯನ್ನು ಕೆಲ ಜನಪ್ರತಿನಿಧಿಗಳು ಪ್ರಚಾರದ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇಂತಹ ಪ್ರಚಾರಪ್ರಿಯ ಜನಪ್ರತಿನಿಧಿಗಳಿಗೆ ಜನಹಿತಕ್ಕಿಂತ ಪ್ರಚಾರವೇ ಮುಖ್ಯವಾಗಿದೆ. ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಗಳಾಗಿ ಚೆಕ್ಡ್ಯಾಂ, ಕೆರೆಯ ಕಟ್ಟೆ ಒಡೆದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.