ADVERTISEMENT

ಅಭಿವೃದ್ಧಿ ಕೆಲಸಕ್ಕೆ ಅಡ್ಡಿ: ಶಾಸಕ ಆರೋಪ

ಸೋಮಯಾಜನಳ್ಳಿ: ಗ್ರಾ.ಪಂ ಸದಸ್ಯರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 7:32 IST
Last Updated 8 ಜನವರಿ 2021, 7:32 IST
ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಪಲ್ಲಿ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾಗಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಶಾಸಕ ರಮೇಶ್ ಕುಮಾರ್ ಅಭಿನಂದಿಸಿದರು
ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಪಲ್ಲಿ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾಗಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಶಾಸಕ ರಮೇಶ್ ಕುಮಾರ್ ಅಭಿನಂದಿಸಿದರು   

ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಿರುತ್ಸಾಹಗೊಳ್ಳಬಾರದು. ಮತದಾರರ ತೀರ್ಪನ್ನು ಗೌರವಿಸಬೇಕು. ಪಕ್ಷ ಸೋತವರು, ಗೆದ್ದವರ ನಡುವೆ ಯಾವುದೇ ಪಕ್ಷಪಾತ ಮಾಡುವುದಿಲ್ಲ. ಇಬ್ಬರ ಹಿತಕಾಯಲು ಬದ್ಧವಾಗಿದೆ ಎಂದು ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದರು.

ತಾಲ್ಲೂಕಿನ ಸೋಮ ಯಾಜಲಹಳ್ಳಿಯಲ್ಲಿ ಗುರುವಾರ ಏರ್ಪಡಿಸಿದ್ದ ನೂತನ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

‘ನನ್ನ ರಾಜಕೀಯ ಜೀವನ 28ನೇ ವಯಸ್ಸಿನಲ್ಲಿ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇನೆ. ನನ್ನ ಬೆಳವಣಿಗೆಗೆ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞನಾಗಿದ್ದೇನೆ. ರಾಜಕೀಯದಲ್ಲಿ ಅಸಂಬದ್ಧವಾಗಿ ಮಾತನಾಡುವ ಜನರ ಮಾತಿಗೆ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ’ ಎಂದು ಹೇಳಿದರು.

ADVERTISEMENT

ಈ ಭಾಗದಲ್ಲಿ ಪ್ರತಿಫಲ ಆಪೇಕ್ಷಿಸದೆ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಿದ ಜನಪ್ರಿಯ ಮುಖಂಡ ದಿವಂಗತ ಚೆನ್ನಪ್ಪನವರ ರಾಜಕೀಯ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ ಅವರು, ‘ಎಲ್ಲ ಗ್ರಾಮಗಳು ಒಂದೇ ತರಹ ಇರುವುದಿಲ್ಲ. ಆದರೂ ನಾನು ಯಾವುದೆ ತಾರತಮ್ಯ ಮಾಡದೆ ಎಲ್ಲ ಗ್ರಾಮಗಳಿಗೂ ಅಗತ್ಯ ಸೌಲಭ್ಯ ಕಲ್ಪಿಸಿದ್ದೇನೆ’ ಎಂದರು.

ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಸಲುವಾಗಿ 2013ನೇ ಸಾಲಿನಲ್ಲಿ ನೀಡಿದ ಪ್ರಣಾಳಿಕೆಯಂತೆ ಪಕ್ಷಾತೀತ, ಜಾತ್ಯತೀತವಾಗಿ ವಸತಿ, ಕುಡಿಯುವ ನೀರು ರಸ್ತೆ ಸೌಲಭ್ಯ ಕಲ್ಪಿಸಿದ್ದೇನೆ. ಆದರೂ ಕೆಲವು ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸುವ ಮುಖಂಡರ ಬೆಂಬಲಿಗರಿಗೆ ಮತ ನೀಡಿರುವುದು ವಿಪರ್ಯಾಸ ಎಂದು ಹೇಳಿದರು.

ಕೆಲವರು ನಿರಂತರವಾಗಿ ನಮ್ಮ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಉಂಟು ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. 20 ಸಾವಿರ ಮನೆಗಳು ಮಂಜೂರು ಮಾಡಿಸಿದಾಗ, ಶೂನ್ಯ ಬಡ್ಡಿಯಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ನೀಡಿದಾಗ ಹಾಗೂ ಕೆ.ಸಿ. ವ್ಯಾಲಿ ಯೋಜನೆಯಲ್ಲಿ ಕೆರೆಗಳು ತುಂಬಿಸುವ ಕಾರ್ಯಕ್ಕೂ ಅಡ್ಡಿಪಡಿಸಿರುವುದೇ ಅವರ ಸಾಧನೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕೋಚಿಮುಲ್ ನಿರ್ದೇಶಕ ಹನುಮೇಶ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಎ.ಪಿ.ಎಂ.ಸಿ. ಅಧ್ಯಕ್ಷ ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗರತ್ನಮ್ಮ ಮಂಜುನಾಥರೆಡ್ಡಿ, ಮುಖಂಡ ವೆಂಕಟೇಶರಾವ್ ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.